ಬಳ್ಳಾರಿ, ಆ.20 : ಈಗಾಗಲೆ ಬಳ್ಳಾರಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಕಾರ್ಯ ಶುರುವಾಗಿದ್ದು ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು,ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಅಧ್ಯಕ್ಷೆ ಲೀಲಾವತಿ ಹೇಳಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರವಾರ ನಡೆದ 17ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ಚಿತ್ರಸಹಿತ ಬೆಳೆವಿವರ ನಮೂದಿಸುವುದರಿಂದ ಬೆಳೆವಿಮೆ ಪಾವತಿ ಸೇರಿದಂತೆ ಸರಕಾರದ ವಿವಿಧ ಯೋಜನೆಗಳಿಗೆ ಇದು ಅನುಕೂಲವಾಗಲಿದ್ದು,ರೈತರು ಇದೇ 24ರೊಳಗಾಗಿ ವಿವರ ದಾಖಲಿಸಬೇಕು ಎಂದು ಕೋರಿದ ಅವರು ಕೃಷಿ ಇಲಾಖೆ ಅಧಿಕಾರಿಗಳು ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದರು.ಕರೋನಾ ವೈರಸ್ ಹರಡುವುದನ್ನು ತಡೆಯಲು ಲಾಕ್ಡೌನ್ ವಿಧಿಸಿದ್ದ ಹಿನ್ನಲೆ ದುಡಿಯಲು ಹೋದ ಕೂಲಿ ಕಾರ್ಮಿಕರು ಮರಳಿ ಗ್ರಾಮಗಳಿಗೆ ಬಂದಿದ್ದು,ಅಂತವರಿಗೆ ಅಂಗನವಾಡಿ ಕೇಂದ್ರಗಳಿಂದ ಆಹಾರ ವಿತರಣೆ ಮಾಡಲಾಗುತ್ತಿದೆ ಮತ್ತು ವಾರಕ್ಕೊಮ್ಮೆ ಅವರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಹಾಗೂ 29 ಹೊಸ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ತಾಲೂಕಿನಲ್ಲಿ 10 ಎಕೋಪಾರ್ಕ್ಗಳ ಸ್ಥಾಪನೆ ಮಾಡಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಅಡಿ ತಾಲೂಕಿನ 11 ಗ್ರಾಪಂಗಳಲ್ಲಿ ಒಣಕಸ ಹಾಗೂ ಹಸಿಕಸವನ್ನು ಸಂಗ್ರಹಣೆ ಮಾಡಲಾಗುತ್ತಿದೆ ಎಂದು ವಿವರಿಸಿದ ಅವರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಸಾಗಿವೆ ಎಂದರು.
ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘ ಚರ್ಚೆಗಳು ನಡೆದವು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪುಷ್ಪಾವತಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಬಸಪ್ಪ, ತಾಪಂ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.