ಮಡಿಕೇರಿ ಆ.21 ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ವಿರಾಜಪೇಟೆ ತಾಲ್ಲೂಕಿನ ಹುದಿಕೇರಿ ಮತ್ತು ಶ್ರೀಮಂಗಲ ಹೋಬಳಿಗಳಲ್ಲಿ ಬೆಳೆಹಾನಿಯಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ವೀಕ್ಷಿಸಿದರು.
ಈ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆ ಮತ್ತು ಗಾಳಿಯ ತೀವ್ರತೆಯಿಂದ ಕೃಷಿ, ತೋಟಗಾರಿಕೆ ಮತ್ತು ತೋಟದ ಬೆಳೆಗಳು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಅಂದಾಜು 34,170 ಹೆಕ್ಟೇರ್ ಬೆಳೆ ಹಾನಿಯಾಗಿರುತ್ತದೆ.
ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ ಮಾರ್ಗಸೂಚಿಯಂತೆ ಶೇ.33 ಮತ್ತು ಅದಕ್ಕೂ ಮೇಲ್ಪಟ್ಟು ಬೆಳೆ ಹಾನಿಗೊಳಗಾದ ರೈತರು ಬೆಳೆಹಾನಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ರೈತರು ಪರಿಹಾರ ಕೋರಿ ನಿಗಧಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಹತ್ತಿರದ ನಾಡ ಕಚೇರಿ ಅಥವಾ ಸಂಬಂಧಪಟ್ಟ ಗ್ರಾಮಲೆಕ್ಕಿಗರಿಗೆ ಸಲ್ಲಿಸಬಹುದಾಗಿದೆ. ಈ ಬಗ್ಗೆ ಕಂದಾಯ, ತೋಟಗಾರಿಕೆ, ಕೃಷಿ ಮತ್ತು ಕಾಫಿ ಮಂಡಳಿಯಿಂದ ಜಂಟಿ ಸರ್ವೆ ಕೈಗೊಳ್ಳಲಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಅವರು ಬೆಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಿದರು.