ಮಡಿಕೇರಿ ನ.01 -ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಸಚಿವರ ಧರ್ಮಪತ್ನಿ ಶೈಲಜಾ ಅವರು ನಾಡಿನ ಪುಣ್ಯಕ್ಷೇತ್ರ, ಕಾವೇರಿ ನದಿ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಗಣಪತಿ, ಸುಬ್ರಮಣ್ಯ, ಮಹಾವಿಷ್ಣು ಹಾಗೂ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ತಲಕಾವೇರಿಗೆ ತೆರಳಿ, ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಹಾಗೂ ಜಿಲ್ಲೆಗೆ ಸುಭಿಕ್ಷೆ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ಸಮಿತಿ ಸದಸ್ಯರಾದ ಡಾ.ಕಾವೇರಪ್ಪ, ತಕ್ಕಮುಖ್ಯಸ್ಥರಾದ ಕೋಡಿ ಮೋಟಯ್ಯ, ತಹಶೀಲ್ದಾರ್ ಮಹೇಶ್, ಡಿವೈಎಸ್ಪಿ ದಿನೇಶ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ದೇವಾಲಯ ಇಒ ಬಿ.ಎಂ.ಕೃಷ್ಣಪ್ಪ ಇತರರು ಇದ್ದರು.