ಗದಗ ನವೆಂಬರ ೧೮ : ಕೋವಿಡ್-೧೯ ಸೋಂಕು ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ವಿಶ್ವ ವಿಕಲಚೇನತರ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯದ ಕ್ರಮ ಜರುಗಿಸುವಂತೆ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ. ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ ವಿಶ್ವವಿಕಲಚೇತನರ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ವಯ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು.
ಕಾರ್ಯಕ್ರಮಕ್ಕೆ ಆಗಮಿಸುವ ವಿಕಲಚೇತನರನ್ನು ಜವಾಬ್ದಾರಿಯುತವಾಗಿ ಕರೆತರಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಯಕ್ರಮದ ದಿನದಂದು ಕೋವಿಡ್ ನಿಯಂತ್ರಣ ಕುರಿತಂತೆ ಅಗತ್ಯದ ಕಡ್ಡಾಯ ಮಾಸ್ಕ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ನಿಗಾವಹಿಸಬೇಕು. ಡಿ. ೩ ರಂದು ಜಿಲ್ಲಾಢಳಿತ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವ ಹಾಗೂ ಕಾರ್ಯಕ್ರಮಕ್ಕೆ ಗಣ್ಯರು, ಅತಿಥಿಗಳನ್ನು ಶಿಷ್ಠಾಚಾರದ ಪ್ರಕಾರ ಆಹ್ವಾನಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಒಟ್ಟಾರೆಯಾಗಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಶ್ವವಿಕಲಚೇತನರ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಶಸ್ವಿಗೊಳಿಸಲು ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ. ಸಭೆಯಲ್ಲಿ ತಿಳಿಸಿದರು.
ಗದಗ-ಬೆಟಗೇರಿ ನಗರ ಸಭೆ ಪೌರಾಯುಕ್ತ ರಮೇಶ ಜಾದವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ ಎ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಬಿ.ವಿಶ್ವನಾಥ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಮಹಾಂತೇಶ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.