ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

0
85

ದಾವಣಗೆರೆ, ಜ.20-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧುವಾರದಂದು ದಾವಣಗೆರೆ ನಗರದ ಆಜಾದನಗರ ಪೊಲೀಸ್ ಠಾಣೆ ವ್ಯಾಪ್ತಿ ಹಾಗೂ ಅರಳೀಮರ ವೃತ್ತ, ಕೆ.ಆರ್ ರೋಡ್ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಪುರಸಭೆ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 13, ಸೆಕ್ಷನ್ 6ಎ ಅಡಿಯಲ್ಲಿ 07, ಸೆಕ್ಷನ್ 6ಬಿ ಅಡಿಯಲ್ಲಿ 02 ಸೇರಿದಂತೆ ಒಟ್ಟು 22 ಪ್ರಕರಣಗಳನ್ನು ದಾಖಲಿಸಿ, ರೂ.2,300/- ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಯಿತು.
ತಂಡವು ದಾವಣಗೆರೆ ನಗರಗಳ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.
ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಎಲ್.ಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ ಕಳಿಹಾಳ, ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಅಂಜನಪ್ಪ, ವೆಂಕಟಾಚಲಕುಮಾರ, ಜಯಪ್ರಕಾಶ, ಮಹಾನಗರಪಾಲಿಕೆಯ ದಫೇದಾರ್, ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here