ಬಳ್ಳಾರಿ,ಫೆ.04 : ಪ್ರತಿವರ್ಷದಂತೆ ಈ ಬಾರಿಯೂ ಕೂಡ ಶ್ರೀ ಪುರಂದರ ದಾಸರ ಆರಾಧೋನತ್ಸವವನ್ನು ಫೆ.11ರಂದು ಕೋವಿಡ್ ಮಾರ್ಗಸೂಚಿ ಅನುಸರಿಸಿಕೊಂಡು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಹೊಸಪೇಟೆಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಶ್ರೀ ಪುರಂದರದಾಸರ ಆರಾಧನೋತ್ಸವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಚಟುವಟಿಕೆಗಳು ಮಾಡಿಕೊಂಡು ಬರಲಾಗುತ್ತಿತ್ತು; ವರ್ಷದಿಂದ ವರ್ಷಕ್ಕೆ ರಾಜ್ಯಮಟ್ಟದ ಆಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಸಹ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ಕಲಾವಿದರಿಗೂ ವೇದಿಕೆ ಅವಕಾಶ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಒಂದು ವೇದಿಕೆ ನಿರ್ಮಿಸಲು ಉದ್ದೇಶಿಸಲಾಗಿದೆ. ಪುರಂದರದಾಸರ ಭಾವಚಿತ್ರದ ಮೆರವಣಿಗೆಯು ದೇವಸ್ಥಾನದ ಆನೆಯ ಮೆರವಣಿಗೆಯ ಮೂಲಕ ಕಲಾವಿದರ ಸಹಯೋಗದೊಂದಿಗೆ ಮೆರವಣಿಗೆ ನಡೆಯಲಿದೆ.
ಪುರಂದರ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಫೆ.11ರಂದು ಸಂಜೆ ನಡೆಯಲಿರುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಚಾಲನೆ ನೀಡಲಿದ್ದಾರೆ ಎಂದು ವಿವರಿಸಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಪುರಂದರ ದಾಸರ ಆರಾಧನೋತ್ಸವ ಅಚ್ಚುಕಟ್ಟಾಗಿ ಮತ್ತು ಅದ್ಧೂರಿಯಾಗಿ ಜರುಗುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಹೊಸಪೇಟೆ ಸಹಾಯಕ ಆಯುಕ್ತ ಸಿದ್ದರಾಮೇಶ,ತಹಸೀಲ್ದಾರ್ ವಿಶ್ವನಾಥ,ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.