ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿದರೆ ಗುಣಪಡಿಸಬಹುದು: ಡಾ.ಜಿ.ಡಿ.ರಾಘವನ್

0
120

ದಾವಣಗೆರೆ: ಫೆ.05 : ಕ್ಯಾನ್ಸರ್ ಖಾಯಿಲೆಯನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಿದಾಗ ರೋಗಿಯನ್ನು ಗುಣಮುಖರನ್ನಾಗಿ ಮಾಡಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ದಾವಣಗೆರೆ ಇವರುಗಳ ಸಹಯೋಗದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ಯಾನ್ಸರ್ ಕುರಿತು ಜನರಲ್ಲಿ ಮಾಹಿತಿ ಮತ್ತು ಅರಿವಿನ ಕೊರತೆ ಇದೆ. ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಮೂಲಕ ಮತ್ತು ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂದರು.
ಆಶಾ ಕಾರ್ಯಕರ್ತೆಯರು ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸಮುದಾಯದಲ್ಲಿ ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಸಮುದಾಯ ಆಧಾರಿತ ತಾಳೆ ಪಟ್ಟಿಯನ್ನು ತುಂಬಿ ಅದರಲ್ಲಿ 4 ಕ್ಕಿಂತ ಹೆಚ್ಚು ಅಂಕಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಹತ್ತಿರದ ಪ್ರಾದೇಶಿಕ ಆರೋಗ್ಯ ಕೇಂದ್ರಕ್ಕೆ ಕರೆದು ತಪಾಸಣೆಗೆ ಒಳಪಡಿಸುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಎಸ್.ಆಸ್ಪತ್ರೆಯ ಕ್ಯಾನ್ಸರ್ ರೋಗ ಶಸ್ತ್ರಚಿಕಿತ್ಸಕ ವಿಭಾಗದ ವೈದ್ಯಾಧಿಕಾರಿ ಡಾ. ಲಿಂಗನಗೌಡ ಪಾಟೀಲ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಲಕ್ಷಣಗಳನ್ನು ಕಂಡುಹಿಡಿಯುವ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು. ಐಸಿಎಂಆರ್-2020 ರ ಸಮೀಕ್ಷೆ ಪ್ರಕಾರ ನಮ್ಮ ದೇಶದಲ್ಲಿ ಅಂದಾಜು 13,92,179 ಕ್ಯಾನ್ಸರ್ ರೋಗಿಗಳಿದ್ದಾರೆ. ಪ್ರಮುಖವಾಗಿ ಗರ್ಭಕಂಠÀದ ಕ್ಯಾನ್ಸರ್ ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ನಂತರ ಸ್ತನ ಕ್ಯಾನ್ಸರ್, ತದನಂತರ ಬಾಯಿ ಕ್ಯಾನ್ಸರ್ ರೋಗಿಗಳು ಕಂಡುಬರುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾವಂತರಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆಯಲು ಮಾನಸಿಕವಾಗಿ ಹಿಂಜರಿದು, ಕೊನೆಯ ಎರಡು ಹಂತದಲ್ಲಿ ಬಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರು ಸಹ 5 ರಿಂದ 7 ವರ್ಷದ ವರೆಗೆ ಮಾತ್ರ ಜೀವಿತಾ ಅವಧಿಯನ್ನು ಮುಂದೂಡಲು ಸಾಧ್ಯವಾಗುತ್ತಿದೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ವಾಸಿಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತಹ ಕೆಲಸಗಳು ಅತೀ ಹೆಚ್ಚಾಗಿ ಆಗಬೇಕು ಎಂದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ ಅಧ್ಯಕ್ಷೀಯ ಮಾತುಗಳನ್ನಾಡಿ, ಪ್ರಾದೇಶಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಗ್ರಾಮಗಳ ಜನರಿಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಬೇಕು. ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.
ಶರೀರದ ಯಾವುದೇ ಭಾಗದ ಜೀವಕೋಶಗಳ ಅನಿಯಂತ್ರಿತ ವಿಭಜನೆಯಾದರೆ ಅಥವಾ ರೋಗಿಯ ದೇಹದಲ್ಲಿ ವಿಪರಿತ ತೂಕ ಇಳಿಕೆ, ಹಸಿವು ಆಗದೆ ಇರುವುದು, ಬಾಯಲ್ಲಿ ಬಿಳಿ ಮಚ್ಚೆ ಅಥವಾ ಕೆಂಪು ಮಚ್ಚೆಗಳು ಹೆಚ್ಚಾಗಿ ಕಂಡುಬಂದಲ್ಲಿ, ಧ್ವನಿಯಲ್ಲಿ ಬದಲಾವಣೆ, ಬಾಯಿ ತೆರೆಯಲು ಆಗದೆ ಇರುವುದು, ಸ್ತನದ ಸುತ್ತ ನೋವು, ಊತ ಸ್ತನದ ತೊಟ್ಟಿನಿಂದ ರಕ್ತಸ್ರಾವ, ಮಹಿಳೆಯ ಮುಟ್ಟಿನ ನಂತರ ರಕ್ತಸ್ರಾವದ ವ್ಯತ್ಯಾಸ ಹೀಗೆ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಮುಜುಗರಕ್ಕೆ ಒಳಗಾಗದೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಬೇಕು. ಹಾಗೆಯೇ ಈ ಲಕ್ಷಣಗಳನ್ನು ಒಳಗೊಂಡ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು ಎಂದರು.
ಈ ವೇಳೆ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಎಸ್.ಎ. ಗಿರಿಧರ್, ಸ್ತನ ಕ್ಯಾನ್ಸರ್, ಗರ್ಭ ಕಂಠದ ಕ್ಯಾನ್ಸರ್ ಮತ್ತು ಉಪಶಾಮಕ ಆರೈಕೆ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು. ಕಾಲೇಜ್ ಆಫ್ ಡೆಂಟಲ್ ಸೈನ್ಸ್‍ನ ಹಿರಿಯ ಪ್ರಾಧ್ಯಾಪಕಿ ಡಾ. ಜಿ.ಪಿ.ಮಮತ ಬಾಯಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕೆ.ಹೆಚ್.ಗಂಗಾಧರ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಪಿ.ಡಿ. ಮುರುಳಿಧರ್, ಜಿಲ್ಲಾ ಮಲೇರಿಯ ನಿಯಂತ್ರಣ ಅಧಿಕಾರಿ ಡಾ.ನಟರಾಜ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರೇಣುಕಾರಾಧ್ಯ ಸೇರಿದಂತೆ ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಭಾರ್ಕಿ ನಿರೂಪಿಸಿದರು.

LEAVE A REPLY

Please enter your comment!
Please enter your name here