ಧಾರವಾಡ ಫೆ.15: ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದಿರುವ ಫಲಾನುಭವಿಗಳ ಘಟಕಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವಿಕುಮಾರ ಸುರಪುರ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಭೇಟಿ ನೀಡಿ, ಪರಿಶೀಲಿಸಿದರು.
ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ 2020-21 ನೇ ಸಾಲಿನ ಯೋಜನೆಯಡಿ ನೀಡಿರುವ ಅನುದಾನದಲ್ಲಿ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಇನಪ್ರಾ ಪೈನ್ ಪುಡ್ಸ್ ಕೈಗಾರಿಕೆಯ ಮಾವು ಸಂಸ್ಕರಣ ಹಾಗೂ ಶೀತಲಗೃಹ ಘಟಕವು, ಉತ್ತರ ಕರ್ನಾಟಕದಲ್ಲಿ ಅತ್ಯಂತ ದೊಡ್ಡ ಮಾವು ಸಂಸ್ಕರಣ ಹಾಗೂ ಶೀತಲಗೃಹವಾಗಿದೆ. ಈ ಕೈಗಾರಿಕೆಗೆ ಬಹು ಜಿಲ್ಲೆಗಳಿಂದ ಮಾವು ಪೂರೈಕೆ ಆಗಲಿದೆ. ಮಾವು ಸೀಜನ್ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಂತರ ಧಾರವಾಡ ತಾಲೂಕಿನ ಹೊಸಟ್ಟಿ, ತಡಕೋಡ ಗ್ರಾಮದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದ ಫಲಾನುಭವಿಗಳ ತೋಟಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು.
ಮಧ್ಯಾಹ್ನ ಉಪ್ಪಿನಬೆಟಗೇರಿ ಗ್ರಾಮಕ್ಕೆ ತೆರಳಿ ಉಪ್ಪಿನಬೆಟಗೇರಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ವಿವಿಧ ಕಸೂತಿ ಹಾಗೂ ಸ್ವಉದ್ಯೋಗಗಳನ್ನು ಪರಿಶೀಲಿಸಿ, ಸ್ವಸಹಾಯ ಸಂಘದ ಪ್ರತಿನಿಧಿಗಳೊಂದಿಗೆ ಯೋಜನೆ ಕುರಿತು ಚರ್ಚಿಸಿ ಅಭಿಪ್ರಾಯ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಂ. ಕುಂದೂರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಐ.ಬಿ.ರಾಜಶೇಖರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೆ.ಸಿ.ಬದ್ರಣ್ಣನವರ, ತಹಶಿಲ್ದಾರ್ ಸಂತೋಷ ಬಿರಾದಾರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.