ಹಾಸನ ಫೆ.19 :-ಎಲ್ಲಾ ಇಲಾಖೆಗಳಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ರೂಪಿಸಿರುವ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಯನ್ನೂ ಶೇ. ನೂರರಷ್ಟು ಮಾಡುವಂತೆ ಜಿಲ್ಲಾಧಿಕಾರಿ ಆರ್. ಗಿರಿಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು 2020-21ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಆಗಿರುವ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಕಾಲಮಿತಿಯೊಳಗೆ ಯೋಜನೆಗಳ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ನಿರ್ದೇಶನ ನೀಡಿದರು.
ಯೋಜನೆಗಳ ಅನುಷ್ಟಾನದಲ್ಲಿ ವಿಳಂಬ ಮಾಡುವ ಹಾಗೂ ನಿರ್ಲಕ್ಷ ತೋರುವ ಹಣ ಸದ್ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಸಿದರು.
ಯೋಜನೆಗಳು ನೆಪಮಾತ್ರಕ್ಕೆ ಇರಬಾರದು ಅವುಗಳು ಪರಿಶಿಷ್ಟ ಜಾತಿ, ಪ.ಪಂಗಡ ಜನರ ಜೀವನ ಮಟ್ಟ ಉತ್ತಮಗೊಳಿಸಲು ನೇರವಾಗುವಂತಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾವೇರಿ ನೀರಾವರಿ ನಿಗಮ ವಿಶ್ವೇಶ್ವರಯ್ಯ ಜಲನಿಗಮ, ಲೋಕೋಪಯೋಗಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ಕಾಮಗಾರಿ ಅನುಷ್ಟಾನದ ವೇಳೆ ಪರಿಶಿಷ್ಟ ಜಾತಿ ಹಾಗೂ ಪ. ಪಂಗಡದ ಶೇ. ನೂರರಷ್ಟು ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಕ್ಷರ ದಾಸೋಹ ಯೋಜನೆಯಡಿ ಆಹಾರ ಪದಾರ್ಥಗಳನ್ನು ಸಕಾಲದಲ್ಲಿ ವಿತರಿಸಬೇಕು, ಗುಣಮಟ್ಟ ಹಾಳಗದೇ ಇರುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ ಅಸ್ಪøಶ್ಯತಾ ನಿವಾರಣೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮತ್ತು ಪರಿಣಾಮಕಾರಿಯಾಗಿ ಜನರಿಗೆ ತಿಳಿಯುವಂತೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಮೀನು ಮರಿಗಳನ್ನು ಹೆಚ್ಚಾಗಿ ಉತ್ಪಾಧನೆ ಮಾಡಿ ವಿತರಿಸಬೇಕು ಇದರಿಂದ ಪರಿಶಿಷ್ಟ ಜಾತಿ, ಪ.ಪಂಗಡದವರ ಆರ್ಥಿಕ ಉತ್ತೇಜನಕ್ಕೆ ಸಹಕಾರಿಯಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಣಾಧಿಕಾರಿ ಬಿ.ಎ ಪರಮೇಶ್ ಅವರು ಗ್ರಾಮೀಣ ಭಾಗದಲ್ಲಿ ಕೆಲವು ಕಾಮಗಾರಿಗಳನ್ನು ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಜೇನುಸಾಕಾಣಿಕೆಗಳಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡದವರ ಹೆಚ್ಚಿನ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತಾಗಬೇಕು ಎಂದ ಅವರು ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗುವ ಎಲ್ಲಾ ಕೊಳವೆ ಭಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕು, ಚೆಸ್ಕಾಂ ಹಾಗೂ ಅಂಬೇಡ್ಕರ್ ಅಭವೃದ್ಧಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಿದೆ ಎಂದು ಆರ್. ಗಿರೀಶ್ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.