19 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಪನಾಯಕನಹಳ್ಳಿ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

0
107

ಬಳ್ಳಾರಿ,ಮಾ.01: ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಗ್ರಾಮದ ಹತ್ತಿರ 19 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಮಾಜಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ವಸತಿ ಶಾಲೆಯ ಕ್ಯಾಂಪಸ್‍ನಲ್ಲಿ ಸುತ್ತಾಡಿ, ಅಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳು ಹಾಗೂ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯೆಯ ಜೊತೆಗೆ ಸಂಸ್ಕಾರವೂ ಅಗತ್ಯ. ವಿದ್ಯೆ ಕಡಿಮೆಯಾದರೂ ಪರವಾಗಿಲ್ಲ;ಸಂಸ್ಕಾರ ರೂಢಿಸಿಕೊಳ್ಳುವುದನ್ನು ಮರೆಯದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಹೇಳಿದ ಸಚಿವ ಶ್ರೀರಾಮುಲು ಅವರು 10 ಜಿಲ್ಲೆಗಳಲ್ಲಿ ಸ್ಪೋರ್ಟ್ ಶಾಲೆಗಳ ಸ್ಥಾಪನೆ, ವಸತಿ ಶಾಲೆಗಳಿಗೆ 500 ವಾರ್ಡನ್ ಗಳು ಹಾಗೂ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿರುವ ಎಲ್ಲ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಏಳೆಂಟು ಅಂಬೇಡ್ಕರ್ ಮತ್ತು ವಾಲ್ಮೀಕಿ ಭವನ ಮಂಜೂರು ಮಾಡುವಂತೆ ಸ್ಥಳೀಯ ಶಾಸಕ ಭೀಮಾನಾಯಕ್ ಅವರು ಕೋರಿಕೊಂಡಿದ್ದು; ಪಟ್ಟಿ ನೀಡಿದಲ್ಲಿ ತಕ್ಷಣ ಮಂಜೂರು ಮಾಡಿಕೊಡುವುದಾಗಿ ತಿಳಿಸಿದರು.
ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಹಾಗೂ ಸಂಸದ ವೈ.ದೇವೇಂದ್ರಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಶರಣಮ್ಮ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.
ನಂತರ ಸಚಿವ ಬಿ.ಶ್ರೀರಾಮುಲು ಅವರು ಸ್ಥಳೀಯ ಶಾಸಕ ಭೀಮಾನಾಯಕ್ ಹಾಗೂ ಸಂಸದ ವೈ.ದೇವೇಂದ್ರಪ್ಪ ಅವರೊಂದಿಗೆ 60 ವರ್ಷ ದಾಟಿದವರಿಗೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ 45ರ ಮೇಲಿನಿರುವವರಿಗೆ ನೀಡಲಾಗುಗುತ್ತಿರುವ ಕೋವಿಡ್ ಲಸಿಕಾಕರಣದ ಪ್ರಕ್ರಿಯೆಯನ್ನು ಹಗರಿಬೊಮ್ಮನಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here