ಬಳ್ಳಾರಿ,ಮಾ.09 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್.ಟಿ.ಇ.ಪಿ ವಿಭಾಗ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಮಿಲ್ಲರಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕ್ಷಯರೋಗಿಗಳು ಮತ್ತು ಆರೈಕೆ ಮಾಡುವರೊಂದಿಗೆ ಸೋಮವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಇಂದ್ರಾಣಿ ಅವರು ಮಾತನಾಡಿ ಪೌಷ್ಠಿಕ ಆಹಾರ ಸೇವನೆ ಹಾಗೂ ಸರಿಯಾದ ಚಿಕಿತ್ಸೆ ಅನುಸಣೆಯಿಂದ ಕ್ಷಯರೋಗದಿಂದ ಬೇಗ ಗುಣಮುಖರಾಗಬಹುದು ಎಂದು ತಿಳಿಸಿದರು.
ಈ ಪ್ರದೇಶದ ಕಾರ್ಮಿಕರು ವಿವಿಧ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದರಿಂದ ಯಾವುದೇ ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ಕ್ಷಯರೋಗಿಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಆರೋಗ್ಯ ವಿಚಾರಿಸಿಕೊಳ್ಳುವುದರೊಂದಿಗೆ ನೈತಿಕ ಬೆಂಬಲ ನೀಡಿದರು.
ಕೆ.ಎಚ್.ಪಿ.ಟಿಯ ಜಿಲ್ಲಾ ಸಂಯೋಜಕರಾದ ಪುನೀತಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ರೋಗಿಗಳು, ಆರೈಕೆದಾರರು, ಟಿ.ಬಿ.ಚಾಂಪಿಯನ್ಸ್, ಆಶಾ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ಮಿಲ್ಲರಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸೌಜನ್ಯ, ಸಿಬ್ಬಂದಿಗಳಾದ ಮೇರಿ, ಪುಷ್ಪಾವತಿ, ಸಹನಾ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಕೆ.ಎಚ್.ಪಿ.ಟಿ ಸಿಬ್ಬಂದಿ ಭಾಗವಹಿಸಿದ್ದರು.