ರೇಬಿಸ್ ಕಾಯಿಲೆ ತಡೆಗೆ ನಾಯಿಗಳಿಗೆ ಸಾಮೂಹಿಕ ಚಿಕಿತ್ಸಾ ಆಂದೋಲನ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ ಮಂಜುನಾಥ

0
94

ಬಳ್ಳಾರಿ,ಮಾ.24 :ರೇಬಿಸ್ ಕಾಯಿಲೆ ಹರಡದಂತೆ ನಿಯಂತ್ರಿಸಲು ಸಾಮೂಹಿಕವಾಗಿ ಆಂದೋಲನದ ರೂಪದಲ್ಲಿ ನಾಯಿಗಳಿಗೆ ಚಿಕಿತ್ಸೆ(ವ್ಯಾಕ್ಸಿನೇಷನ್) ನೀಡುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ರೇಬಿಸ್ ನಿಯಂತ್ರಣ ಕಾರ್ಯಕ್ರಮ ಹಾಗೂ ಕೋಟ್ಪಾ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೇಬಿಸ್ ಕಾಯಿಲೆಯು ಮನುಷ್ಯರಿಗೆ ನಾಯಿಗಳು ಕಚ್ಚುವುದರಿಂದ ಹರಡುವಂತ ಮಾರಣಾಂತಿಕ ಕಾಯಿಲೆಯಾಗಿದೆ. ಇದು ನಾಯಿ ಮತ್ತು ಇತರೇ ಪ್ರಾಣಿಗಳು ಕಚ್ಚುವಿಕೆಯಿಂದ ಬರುವಂತ ಕಾಯಿಲೆಯಾಗಿದ್ದು, ಈ ಕಾಯಿಲೆ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ನಾಯಿ ಕಡಿತ ಪ್ರಕರಣಗಳನ್ನು ಕಡಿಮೆಗೊಳಿಸಲು ಹಾಗೂ ನಾಯಿಗಳ ಸಂಖ್ಯೆ ಜಾಸ್ತಿಯಾಗದಂತೆ ತಡೆಗಟ್ಟಬೇಕಿದೆ. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕಾಗಿದ್ದು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಗ್ರಾಮೀಣ ಮಟ್ಟದಲ್ಲಿ ಗ್ರಾಪಂ ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ನಾಯಿ ಕಡಿತದಿಂದ ಉಂಟಾಗುವ ತೊಂದರೆಗಳು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಿ; ಇದರಿಂದ ನಿಮ್ಮ ಊರುಗಳಲ್ಲಿ ಎಷ್ಟು ಜನರಿಗೆ ನಾಯಿ ಕಚ್ಚಿದೆ ಎನ್ನುವುದರ ಕುರಿತು ವಿವರಗಳನ್ನು ಪಡೆಯಬಹುದು. ಗ್ರಾಪಂ ಸದಸ್ಯರು ನಾಯಿ ಕಡಿತಕ್ಕೆ ಒಳಗಾದ ವ್ಯಕ್ತಿಗೆ ಲಸಿಕೆಯನ್ನು ಪೂರೈಸುವ ಕಾರ್ಯ ಮಾಡಿ. ಹಳ್ಳಿಗಳಲ್ಲಿ ಮಾಂಸ ಮಾರಾಟ ಮಾಡುವವರು ಘನತ್ಯಾಜ್ಯವನ್ನು ನಾಯಿಗಳಿಗೆ ಸಿಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕು ಎಂದರು.
ಇದರ ಜೊತೆಗೆ ನಾಯಿಗಳ ಸಂತಾನೋತ್ಪತ್ತಿ ತಡೆಗಟ್ಟಲು ಕ್ರಮಕೈಗೊಳ್ಳುವುದು. ರೇಬಿಸ್ ಕಾಯಿಲೆವುಳ್ಳ ಪ್ರಾಣಿಗಳು ಸತ್ತರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯೊಂದಿಗೆ ಸೂಕ್ತ ರೀತಿಯಲ್ಲಿ ಪ್ರಾಣಿಗಳನ್ನು ಮಣ್ಣು ಮಾಡುವ ಕಾಂiÀರ್i ನಡೆಯಲಿ ಎಂದು ಅವರು ತಿಳಿಸಿದರು.
ಈ ಎಲ್ಲಾ ವಿಷಯಗಳ ಕುರಿತು ತಾಲೂಕುಮಟ್ಟದಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ, ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.
ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯು ರೇಬಿಸ್ ರೋಗಗಳ ಕಂಡು ಬಂದ ಸಾಕು ನಾಯಿಗಳಿಗೆ ಲಸಿಕೆ ನೀಡುವುದರ ಜೊತೆಗೆ ಸಾರ್ವಜನಿಕರಲ್ಲಿ ಇದರ ಕುರಿತು ಅರಿವು ಮೂಡಿಸುವಂತೆ ಸೂಚಿಸಿದ ಎಡಿಸಿ ಮಂಜುನಾಥ ಅವರು ನಾಯಿ ಕಡಿತದ ಮಾಹಿತಿಯನ್ನು ಪಡೆಯುವುದು. ಸಂಶಯಾಸ್ಪದ ರೇಬಿಸ್ ಕಾಯಿಲೆವುಳ್ಳ ಪ್ರಾಣಿಗಳನ್ನು ಗುರುತಿಸಿ ಅವುಗಳನ್ನು ಕ್ವಾರಂಟೈನ್ ಮಾಡಲು ಸಭೆಯಲ್ಲಿ ತಿಳಿಸಿದರು.
ಆರೋಗ್ಯ ಇಲಾಖೆಯು ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿದ್ದಷ್ಟು ಎಆರ್‍ವಿ ದಾಸ್ತಾನು ನಿರ್ವಹಿಸುವುದು, ನಾಯಿ ಕಡಿತದಿಂದ ಉಂಟಾಗುವ ತೊಂದರೆ ಮತ್ತು ನಾಯಿ ಕಡಿತದ ನಂತರ ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಆರೋಗ್ಯ ಇಲಾಖೆ ಮಾಡಬೇಕು. ಇದರ ವರದಿಗಳನ್ನು ತಮ್ಮ ವ್ಯಾಪ್ತಿಯ ಪ್ರತಿ ಮಾಸಿಕ ಸಭೆಗಳಲ್ಲಿ ಇತರೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಚರ್ಚಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ವಹಿಸಬೇಕಾದ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿ ಎಂದು ಅವರು ಸೂಚಿಸಿದರು.
*ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನಕ್ಕೆ ಸೂಚನೆ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಎಡಿಸಿ ಮಂಜುನಾಥ ಅವರು ಸೂಚಿಸಿದರು.
ಸರಕಾರಿ ಕಚೇರಿಗಳು,ಆಸ್ಪತ್ರೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಮತ್ತು ತಂಬಾಕು ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತನ್ನಿ ಎಂದು ಹೇಳಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಸಿಗರೇಟ್ ಮಾರಾಟ ಮಾಡಿದವರು ಕಂಡು ಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಾಯ್ದೆಯ ಕುರಿತು ಅರಿವು ಮೂಡಿಸಲು ನಾಮಫಲಕಗಳನ್ನು ಅಳವಡಿಸುವಂತೆ ಅವರು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್,ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ,ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಹನುಮಂತಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರರು ಇದ್ದರು.

LEAVE A REPLY

Please enter your comment!
Please enter your name here