ಧಾರವಾಡ.ಮಾ.26:ಲಸಿಕಾಕರಣದ ಕಾರ್ಯವನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಚುರುಕುಗೊಳಿಸಲು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ. ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಪಡೆಯ ಹಾಗೂ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಈಗಾಗಲೇ ಈ ಕುರಿತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಹಾಗೂ ಪಿಡಿಓ ಗಳ ಸಭೆಯನ್ನು ಜರುಗಿಸಿ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನ ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ಆಯಾ ತಾಲೂಕಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಪ್ರತಿದಿನ ಗ್ರಾಮವಾರು ಲಸಿಕೆ ಪಡೆದವರ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಲಸಿಕಾಕರಣ ಯಶಸ್ವಿಗೊಳಿಸಲು ಗ್ರಾಮಪಂಚಾಯತ್ ಸದಸ್ಯರ, ಗ್ರಾಮದ ಮುಖಂಡರ ಹಾಗೂ ಗ್ರಾಮದಲ್ಲಿ ವಾಸಿಸುವ ಇತರ ಜನಪ್ರತಿನಿಧಿಗಳ, ಮುಖಂಡರ ಸಹಕಾರದಲ್ಲಿ ಕ್ರಿಯಾಯೋಜನೆಯನ್ನು ಸಿದ್ಧಗೊಳಿಸಲಾಗಿದೆ ಎಂದು ಅವರು ಹೇಳಿದರು.