ಮಡಿಕೇರಿ ಮೇ 06 -ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಗುರುವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಧಿಕಾರಿಗಳ ಜೊತೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿರಾಜಪೇಟೆ ತಾಲ್ಲೂಕಿನಲ್ಲಿ ಕೋವಿಡ್ 19 ನಿಯಂತ್ರಣ ಹಾಗೂ ಇತರೆ ಸಂಬಂಧ ಚರ್ಚಿಸಿದರು. ಬಳಿಕ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್ 19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಸಂಬಂಧ ಪಾಸಿಟಿವ್ ಪ್ರಕರಣಗಳ ಜೊತೆಗೆ, ಅವರ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ಮಾಡಬೇಕು. ತಾಲ್ಲೀಕಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಅಗತ್ಯ ಮುತುವರ್ಜಿ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಬಳಿಕ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ಬಳಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಗೆ ಅಗತ್ಯವಿರುವ ವೈದ್ಯರು, ದಾದಿಯರ ನೇಮಕಕ್ಕೆ ಕ್ರಮ ಕೈಗೊಳ್ಳಾಗಿದೆ ಎಂದರು.
ವಿರಾಜಪೇಟೆ ಕೋವಿಡ್ ಆರೈಕೆ ಕೇಂದ್ರದಲ್ಲಿ 51 ಆಕ್ಸಿಜನ್ ಬೆಡ್ ಗಳು ಈಗ ಇದೆ. ಹೆಚ್ಚುವರಿಯಾಗಿ 31 ಬೆಡ್ ಗಳನ್ನು ಮುಂದಿನ ದಿನಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ವಾರದಲ್ಲಿ ಎರಡು ದಿನ ಮಾತ್ರ ಅಂಗಡಿಗಳನ್ನು ತೆರೆಯುವ ನಿರ್ಧಾರ ಸೂಕ್ತವಾದ ಪ್ರತಿಫಲ ನೀಡುವ ನಿರೀಕ್ಷೆ ಇದೆ. ಇದರಿಂದಾಗಿ ಕೆಲ ದಿನಗಳಲ್ಲಿ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಬಹುದು ಎಂದರು.
ಕಡ್ಡಾಯವಾಗಿ ಮಾಸ್ಕ್ ಧರಿಸಿ ದೈಹಿಕ ಅಂತರವನ್ನು ಪಾಲಿಸಿ ಈ ಮೂಲಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಹಕರಿಸಿ ಎಂದೂ ಸಚಿವ ಸೋಮಣ್ಣ ಕೊಡಗಿನ ಜನತೆಯಲ್ಲಿ ಮನವಿ ಮಾಡಿದರು.
ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ರವಿಕುಶಾಲಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಇದ್ದರು.