ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್, ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸದಂತೆ ಕ್ರಮ- ಮಹಾಂತೇಶ್ ಬೀಳಗಿ

0
75

ದಾವಣಗೆರೆ ಮೇ 17 :ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.

ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು, ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮೇಲಿನಂತೆ ವಿವರ ನೀಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಸದ್ಯ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸೋಂಕನ್ನು ಪರಿಣಾಮಕಾರಿಯನ್ನು ನಿಯಂತ್ರಿಸಬೇಕಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು, ಸಂಪನ್ಮೂಲಗಳ ಸದ್ಬಳಕೆಗೆ ಪೂರಕ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್‍ಗಳನ್ನು ಪ್ರಾರಂಭಿಸಬೇಕು, ಇದರ ಜೊತೆಗೆ ಆಸ್ಪತ್ರೆಗಳನ್ನೂ ಬಲಪಡಿಸಬೇಕು. ತುರ್ತು ಸಂದರ್ಭದಲ್ಲಿ ನೆರೆಹೊರೆಯ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು, ಹೋಂ ಐಸೋಲೇಷನ್‍ನಲ್ಲಿ ಇರುವವರ ಮೇಲೆ ತೀವ್ರ ನಿಗಾ ವಹಿಸುವುದರ ಜೊತೆಗೆ, ಸರಿಯಾಗಿ ಔಷಧಿ, ವೈದ್ಯಕೀಯ ನೆರವು ಒದಗಿಸಿ, ಕಾಲಕಾಲಕ್ಕೆ ಅವರ ಆರೋಗ್ಯ ಸ್ಥಿತಿಗತಿಯನ್ನು ಪರಿಶೀಲಿಸುವ ಕಾರ್ಯ ನಡೆಯಬೇಕು. ಯಾವುದೇ ನಿರ್ಲಕ್ಷ್ಯತೆಯಿಂದ ಜೀವಹಾನಿಯಾಗಬಾರದು. ವೈದ್ಯರು, ಅಧಿಕಾರಿಗಳು ಮಾನವೀಯತೆಯೊಂದಿಗೆ ವರ್ತಿಸಿ, ಸ್ಪಂದಿಸಬೇಕು. ಗ್ರಾಮೀಣ ಮಟ್ಟದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ವರದಿಗಳು ಬರುತ್ತಿದ್ದು, ಈ ದಿಸೆಯಲ್ಲಿ ಅಧಿಕಾರಿಗಳು ತೀವ್ರ ನಿಗಾವಹಿಸಿ, ಸೋಂಕು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಗಾಗಲೆ ಕೇಂದ್ರ ಸರ್ಕಾರ ಸವಿವರವಾದ ಮಾರ್ಗಸೂಚಿಯನ್ನು ಹೊರಡಿಸಿದೆ, ಅದರಂತೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ವ್ಯಾಪಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.

06 ಬ್ಲ್ಯಾಕ್ ಫಂಗಸ್ ಪ್ರಕರಣ :
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ, ಅಲ್ಲದೆ ಅಧಿಕಾರಿಗಳು, ವೈದ್ಯರುಗಳ ಪರಿಶ್ರಮದಿಂದ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ರೆಮ್‍ಡೆಸಿವರ್ ಔಷಧಿ ಸರ್ಕಾರಿ ಆಸ್ಪತ್ರೆಗಳಿಗಾಗಿ ಸಮರ್ಪಕವಾಗಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದು, ಐಎಲ್‍ಐ ಪ್ರಕರಣಗಳ ಒಟ್ಟು 78 ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಸದ್ಯ 3656 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್‍ನ 06 ಪ್ರಕರಣಗಳು ವರದಿಯಾಗಿವೆ. ಸದ್ಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 01, ಎಸ್‍ಎಸ್ ಆಸ್ಪತ್ರೆಯಲ್ಲಿ 01 ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ 04 ರೋಗಿಗಳು ಇದ್ದಾರೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸಾ ವಿಧಾನ ಹಾಗೂ ಔಷಧಿ ಸದ್ಯ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಶಿವಮೊಗ್ಗ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಗುರುವಾರದಿಂದ ಪ್ರಾರಂಭವಾಗಲಿದ್ದು, ಅದರನ್ವಯ ರೋಗಿಗಳನ್ನು ಸಮೀಪದ ಜಿಲ್ಲೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್‍ಗಳಿಗೆ ವಿವಿಧ ಸ್ವಾಮೀಜಿಗಳು ಕೂಡ ಸಹಕಾರ ನೀಡುತ್ತಿದ್ದು, ಈಗಾಗಲೆ ತರಳಬಾಳು ಜಗದ್ಗುರುಗಳು ನಗರದಲ್ಲಿ ಹಾಸ್ಟೆಲ್‍ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಹಳೆ ದಾವಣಗೆರೆ ಭಾಗದಲ್ಲಿಯೂ ಕೂಡ ತಾಜ್ ಪ್ಯಾಲೇಸ್, ಇಲ್ಲಿನ ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ. ಜಿಲ್ಲೆಗೆ ಹೆಚ್ಚುವರಿಯಾಗಿ 02 ಕೆಎಲ್ ಆಕ್ಸಿಜನ್ ಹಂಚಿಕೆಯಾಗಿದೆ. ಮಹಾನಗರಪಾಲಿಕೆಯಿಂದ 60 ಆಕ್ಸಿಜನ್ ಕಾನ್ಸ್‍ಂಟ್ರೇಟರ್ಸ್‍ಗಳನ್ನು ನೀಡಲಾಗಿದ್ದು, ಸಂಸದರು ತಮ್ಮ ಟ್ರಸ್ಟ್ ವತಿಯಿಂದ ಹರಿಹರ ಹಾಗೂ ಜಗಳೂರಿನಲ್ಲಿ ಆಕ್ಸಿಜನ್ ಘಟಕ ಹಾಗೂ ಚನ್ನಗಿರಿ ಶಾಸಕರು ಕೆಎಸ್‍ಎಸ್‍ಡಿಎಲ್ ವತಿಯಿಂದ ಚನ್ನಗಿರಿಯಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳು ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ್ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here