ಶಿವಮೊಗ್ಗವನ್ನು ರಾಜ್ಯದ ಆಕರ್ಷಕ ಪ್ರವಾಸಿ ಜಿಲ್ಲೆಯನ್ನಾಗಿ ಮಾರ್ಪಡಿಸಲು ಕ್ರಮ : ಬಿ.ವೈ.ರಾಘವೇಂದ್ರ

0
111

ಶಿವಮೊಗ್ಗ : ಜಗದ್ವಿಖ್ಯಾತ ಜೋಗದ ಜಲಪಾತದ ಸೌಂಧರ್ಯವನ್ನು ಸರ್ವಋತುಗಳಲ್ಲೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ 160ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೋಗ ಜಲಪಾತದ ಅಭಿವೃದ್ಧಿ ಹಾಗೂ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರಾಷ್ಟ್ರೀಯ ಸ್ಥರದ ನೂತನ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃಧ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ಹಬ್ಬ-ಹರಿದಿನಗಳಲ್ಲಿ ಜಲಪಾತ ವೀಕ್ಷಿಸಲು ಅವಕಾಶ ಒದಗಿಸಲಾಗುವುದು. ಈ ಅವಧಿಯಲ್ಲಿ ಜಲಪಾತಕ್ಕೆ ಜಲಾಶಯದ ನೀರನ್ನು ಹರಿಯಬಿಡುವುದರಿಂದ ವಿದ್ಯುತ್ ಉತ್ಪಾದನೆಯಲ್ಲಿ ಸುಮಾರು 5ಕೋಟಿ ರೂ.ಗಳ ನಷ್ಟ ಉಂಟಾಗಬಹುದಾಗಿದ್ದು, ಇದನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಭರಿಸುವ ಬಗ್ಗೆ ಕೆ.ಪಿ.ಟಿ.ಸಿ.ಎಲ್.ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದ ಅವರು, ಜೋಗದ ಸುತ್ತಮುತ್ತಲಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು, ಈ ಎಲ್ಲಾ ಕಾವiಗಾರಿಗಳು ನಿರೀಕ್ಷಿತ 2ವರ್ಷ ವರ್ಷಗಳ ಅವಧಿಯಲ್ಲಿ ಮುಕ್ತಾಯವಾಗಲಿದ್ದು, ಈ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗಳು ಭರದಿಂದ ಸಾಗಿದೆ. ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡ ನಂತರ ಸುಮಾರು 20ಸಾವಿರ ಪ್ರವಾಸಿಗರು ಪ್ರತಿದಿನ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದವರು ನುಡಿದರು.
ಸಾಗರ ಸಮೀಪದ ತಳಕಳಲೆ ಸಮೀಪದಲ್ಲಿ ವಾಟರ್ ಸ್ಪೋಟ್ರ್ಸ್‍ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ವ್ಯವಸ್ಥಿತ ನಿರ್ವಹಣೆಗೂ ಕ್ರಮ ವಹಿಸಲಾಗಿದೆ. ಅಲ್ಲದೇ ಶಿವಮೊಗ್ಗ ಸಮೀಪದ ಸಕ್ರೆಬೈಲು, ಅಕ್ಕಮಹಾದೇವಿ ಜನ್ಮಸ್ಥಳ ಉಡುಗುಣಿ, ನಗರದ ಕೋಟೆ, ಶಿವಪ್ಪನಾಯಕನ ಅರಮನೆ ಮುಂತಾದ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ದೊರೆತು ಜನರ ಜೀವನಮಟ್ಟ ಸುಧಾರಣೆಗೊಳ್ಳಲಿದೆ. ಪರೋಕ್ಷವಾಗಿ ಉದ್ಯೋಗಾವಕಾಶಗಳು ಹೆಚ್ವಲಿವೆ ಎಂದರು.
ಅಂತರಾಷ್ಟ್ರೀಯ ಕ್ರೀಡಾಂಗಣ :
ಸಭೆಯ ಅರ್ಧಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ನಿರ್ಮಿಸಲಾಗುವ ಕ್ರೀಡಾಂಗಣದ ಮಾಲೀಕತ್ವ ಕುವೆಂಪು ವಿಶ್ವವಿದ್ಯಾನಿಲಯದ್ದಾಗಿದ್ದು, ಅವರ ವ್ಯವಸ್ಥಿತ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಪ್ರಸ್ತುತ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ವಸತಿ ನಿಲಯಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65ಕೋಟಿ ರೂ.ಗಳ ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಸುವ್ಯವಸ್ಥಿತವಾದ ಅಂತರಾಷ್ಟ್ರೀಯ ಮಾದರಿಯ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣವು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳ ಕ್ರೀಡಾಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಅಂತರಾಷ್ಟ್ರೀಯ ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದರು.
ಲಾಕ್‍ಡೌನ್‍ನ್ನು ಕಠಿಣವಾಗಿ ಜಾರಿಗೊಳಿಸಿದ ನಂತರ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರ ಶೇ.95ಕ್ಕೆ ಕುಸಿದಿದೆ. ಅಲ್ಲದೇ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಸುಧಾರಣೆ ಕಂಡು ಬರುತ್ತಿದೆ ಎಂದ ಅವರು ಮುಂದಿನ ಕೆಲವು ದಿನಗಳ ಕಾಲ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗದಂತೆ ಮನವಿ ಮಾಡಿದರು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಕುವೆಂಪು ವಿವಿ ಕುಲಪತಿ ಪ್ರೊ.ವೀರಭದ್ರಪ್ಪ, ಮೇಯರ್ ಶ್ರೀಮತಿ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಜಿ.ಅನುರಾಧ, ಭೂಮಿಪುತ್ರ ಕನ್ಸಲ್‍ಟೆನ್ಸಿಯ ವ್ಯವಸ್ಥಾಪಕ ಅಲೋಕ್‍ಶೆಟ್ಟಿ ಸೇರಿದಂತೆ ಕುವೆಂಫು ವಿವಿಯ ಸಿಂಡಿಕೇಟ್ ಸದಸ್ಯರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯು ಕೊರೋನ ಸೋಂಕಿನಿಂದ ಗುಣಮುಖರಾದವರಿಗೆ ದೈಹಿಕ ಕ್ಷಮತೆ ಹೆಚ್ಚಿಸಿಕೊಳ್ಳಲು ಸಾರ್ವಜನಿಕ ವಿತರಣೆಗೆ ಬಿಡುಗಡೆ ಮಾಡಿರುವ ಆಯುರ್ವೇದ ಔಷಧದ ಕಿಟ್‍ನ್ನು ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮುಂತಾದವರು ಬಿಡುಗಡೆಗೊಳಿಸಿದರು.

LEAVE A REPLY

Please enter your comment!
Please enter your name here