ಬೆಳಗಾವಿ : ಅನಾರೋಗ್ಯದಿಂದ ಇತ್ತೀಚಿಗೆ ನಿಧನರಾದ ಪತ್ರಕರ್ತ ಸಂಜೀವಕುಮಾರ್ ನಾಡಗೇರ ಅವರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಗುರುವಾರ (ಜೂ.10) ನಾಡಗೇರ ಕುಟುಂಬದವರಿಗೆ ಸಚಿವರು ನಗದು ಹಣವನ್ನು ನೀಡಿ, ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು, ಇಪ್ಪತ್ತು ವರ್ಷಗಳ ಕಾಲ ವಿವಿಧ ದಿನಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿರುವ ಸಂಜೀವ ನಾಡಗೇರ ಅವರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ವೈಯಕ್ತಿಕವಾಗಿ ನೆರವು ನೀಡಲಾಗಿದೆ ಎಂದು ತಿಳಿಸಿದರು.
ಸಂಜೀವಕುಮಾರ್ ಅವರ ಪತ್ನಿಗೆ ವಿಧವಾ ವೇತನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದ ಅವರು, ಮಾಸಿಕ ಪಿಂಚಣಿಯಿಂದ ಕುಟುಂಬಕ್ಕೆ ಸ್ವಲ್ಪಮಟ್ಟಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ದಿ.ಸಂಜೀವ ಕುಮಾರ್ ಅವರ ಪತ್ನಿ ಹಾಗೂ ಇಬ್ಬರು ಪುತ್ರರು ಸಚಿವರಿಂದ ಧನಸಹಾಯವನ್ನು ಸ್ವೀಕರಿಸಿದರು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪತ್ರಕರ್ತರ ಕುಟುಂಬಕ್ಕೆ ವೈಯಕ್ತಿಕವಾಗಿ ಆರ್ಥಿಕ ನೆರವು ಒದಗಿಸುವ ಮೂಲಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗೋವಿಂದ ಕಾರಜೋಳ ಅವರು, ಪತ್ರಕರ್ತರ ಬಗ್ಗೆ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮೆಹಬೂಬ್ ಮಕಾನದಾರ ಹೇಳಿದರು.
ಇದೇ ವೇಳೆ ನಾಡಗೇರ ಕುಟುಂಬ ಹಾಗೂ ಎಲ್ಲ ಮಾಧ್ಯಮ ಪ್ರತಿನಿಧಿಗಳ ಪರವಾಗಿ ಉಸ್ತುವಾರಿ ಸಚಿವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಮಾಧ್ಯಮ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.