ಬಳ್ಳಾರಿ,ಜೂ.12 : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಜಾಥಾಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಬಾಲ ಕಾರ್ಮಿಕ ಪದ್ದತಿ,ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಈ ಜಾಥಾವು ಆಟೋ ಮೂಲಕ ಬಳ್ಳಾರಿ ನಗರದ ವಿವಿಧೆಡೆ ತೆರಳಿ ಜಾಗೃತಿ ಮೂಡಿಸಲಿದೆ.ನಂತರ ಜಿಲ್ಲೆಯಾದ್ಯಂತ ಸಂಚರಿಸಿ ಅರಿವು ಮೂಡಿಸಲಿದ್ದು,ಈ ಸಂದರ್ಭದಲ್ಲಿ ಕರಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.
ಮಕ್ಕಳು ರಾಷ್ಟ್ರದ ಸಂಪತ್ತು ಬಾಲ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿಯಿಂದ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಬಾಲಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕ, ನೈತಿಕ,ಮಾನಸಿಕ ಹಾಗೂ ಆರ್ಥಿಕ ಶೋಷಣೆಗೆ ಒಳಪಡಿಸುತ್ತದೆ. ಶಿಕ್ಷಣದಿಂದ ವಂಚಿತವಾದ ಮಕ್ಕಳ ಬದುಕು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಮಕ್ಕಳ ಬಾಲ್ಯವನ್ನು ಉಳಿಸೋಣ ಅವರ ದುಡಿತ ತಪ್ಪಿಸಿ, ವಿದ್ಯೆ ಆರೋಗ್ಯವನ್ನು ಒದಗಿಸಿ ದೇಶದ ಉನ್ನತಿಗೆ ಶ್ರಮಿಸೋಣ. 6ರಿಂದ 18 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಾಕಾರಿ ಉದ್ದಿಮೆಗಳಲ್ಲಿ ದುಡಿಯುವುದು ಕಂಡಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಉಪವಿಭಾಗ 1ರ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಪ್ತಾಫ್ ಅಹಮದ್, ಜಿಲ್ಲಾ ಮಹಿಳಾ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರು, ಬಾಲಕಾರ್ಮಿಕ ಯೋಜನಾ ನಿರ್ದೇಶೇಕರಾದ ಎ.ಮೌನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ್,ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ದುರುಗಪ್ಪ ಎಸ್.ಮಾಚನೂರು,ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಕ್ಷೇತ್ರಾಧಿಕಾರಿ ಪಿ.ಎಂ.ಈಶ್ವರಯ್ಯ,ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಇತರರು ಇದ್ದರು.