ಮುಂಗಾರು ಪ್ರವಾಹ ಪರಿಸ್ಥಿತಿ ಪೂರ್ವಸಿದ್ಧತಾ ಕ್ರಮಗಳ ಕುರಿತು ಡಿಸಿ,ಸಚಿವರುಗಳೊಂದಿಗೆ ವಿಡಿಯೋ ಸಂವಾದ,ಪ್ರವಾಹ ಜನ-ಜಾನುವಾರುಗಳ ರಕ್ಷಣೆಗೆ ಆದ್ಯತೆ:ಸಿಎಂ ಬಿಎಸ್‍ವೈ ಸೂಚನೆ

0
94

ಬಳ್ಳಾರಿ, ಜೂ.19 : ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು,ಕಳೆದ ವರ್ಷದಂತೆ ಈ ವರ್ಷವೂ ಪ್ರವಾಹ ಸ್ಥಿತಿ ಎದುರಾಗುವ ಸಾಧ್ಯತೆ ಇದ್ದು,ಪ್ರವಾಹ ಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಮತ್ತು ಅದರಿಂದ ಉಂಟಾಗುವ ಹಾನಿಯ ಪ್ರಮಾಣವನ್ನು ಕಡಿಮೆ ಮಾಡುವುದಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಬೇಕು. ಜನ-ಜಾನುವಾರುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.
ಮುಂಗಾರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವಸಿದ್ಧತಾ ಕ್ರಮಗಳ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು,ಜಿಲ್ಲಾಧಿಕಾರಿಗಳು,ಜಿಪಂ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 1710 ಹಳ್ಳಿಗಳನ್ನು ಪ್ರವಾಹಕ್ಕೆ ಬಾಧಿತವಾಗುವ ಪ್ರದೇಶಗಳೆಂದು ಗುರುತಿಸಲಾಗಿದ್ದು,ಅಲ್ಲಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳು ತತ್‍ಕ್ಷಣ ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿ ರಚಿಸಲಾದ ವಿಪತ್ತು ನಿರ್ವಹಣಾ ತಂಡಗಳು ತಕ್ಷಣ ಕಾರ್ಯಪ್ರವೃತ್ತರಾಗುವ ನಿಟ್ಟಿನಲ್ಲಿ ಸನ್ನದ್ಧವಿರುವಂತೆ ನೋಡಿಕೊಳ್ಳಲು ಅವರು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿಯ ಎಲ್ಲ ರೀತಿಯ ಸವಾಲುಗಳನ್ನು ಎದುರಿಸುವ ಹಾಗೂ ನಿರ್ವಹಣೆ ಮಾಡುವ ಉದ್ದೇಶದಿಂದ 4 ಎನ್‍ಡಿಆರ್‍ಎಫ್ ತಂಡಗಳನ್ನು ಕೊಡಗು,ರಾಯಚೂರು,ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರಿಸಲಾಗಿದೆ. ಸುಸಜ್ಜಿತ ಎಸ್‍ಡಿಆರ್‍ಎಫ್ ತಂಡಗಳನ್ನು ಸಹ ಅವಶ್ಯವಿರುವೆಡೆ ನಿಯೋಜಿಸಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ತಕ್ಷಣ ಗುರುತಿಸಿ ಸ್ಥಳಾಂತರ,ಕಾಳಜಿ ಕೇಂದ್ರಗಳ ಸ್ಥಾಪನೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಪ್ರವಾಹಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಅವರು ಸೂಚಿಸಿದರು.
ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ನೀಡಲಾಗುವ ಪರಿಹಾರವನ್ನು ಆದ್ಯತೆ ಮೇರೆಗೆ ಒದಗಿಸುವ ಕೆಲಸ ಮಾಡಬೇಕು ಎಂದು ಸಿಎಂ ಬಿಎಸ್‍ವೈ ಅವರು ಡಿಸಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಪ್ರತಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಿದ್ಧತಾ ಕ್ರಮಗಳ ವಿವರ ಹಾಗೂ ಬಿತ್ತನೆ,ರಸಗೊಬ್ಬರ ಹಾಗೂ ಇನ್ನೀತರ ಮಾಹಿತಿಯನ್ನು ಪಡೆದುಕೊಂಡರು.
ಮುಖ್ಯಮಂತ್ರಿಗಳೊಂದಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ,ಲಕ್ಷ್ಮಣ ಸವದಿ,ಸಚಿವರಾದ ಆರ್.ಅಶೋಕ,ಬಸವರಾಜ ಬೊಮ್ಮಾಯಿ,ಮುರುಗೇಶ ನಿರಾಣಿ,ಶಿವರಾಂ ಹೆಬ್ಬಾರ್ ಸೇರಿದಂತೆ ಇನ್ನೀತರ ಸಚಿವರು ಇದ್ದರು.
ಅವಳಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ
ತುಂಗಾ ಮತ್ತು ಭದ್ರಾ ಜಲಾಶಯದ ನೀರನ್ನು ಹೆಚ್ಚುವರಿಯಾಗಿ ನದಿಗೆ ಹರಿಸಿದಾಗ ಹಾಗೂ ತುಂಗಾಭದ್ರಾ ಜಲಾಶಯದಿಂದ ಹೆಚ್ಚುವರಿಯಾಗಿ ನೀರು ನದಿಗೆ ಹರಿಸಿದ ಸಂದರ್ಭದಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಪ್ರಸ್ತುತ ತುಂಗಾಭದ್ರಾ ನದಿ ಪಾತ್ರದಲ್ಲಿ ಅಂದರೇ ಸಿರಗುಪ್ಪದಲ್ಲಿ 10,ಕಂಪ್ಲಿ-1,ಹೊಸಪೇಟೆ-2,ಹಡಗಲಿ-16,ಹರಪನಹಳ್ಳಿ-03 ಹಳ್ಳಿಗಳು ಸೇರಿದಂತೆ 32ಹಳ್ಳಿಗಳು ಅಪಾಯಕ್ಕೆ ಒಳಪಡುವ ಸಾಧ್ಯತೆ ಇದ್ದು, ಈ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಬಳ್ಳಾರಿ ಜಿಲ್ಲಾಡಳಿತ ಮಾಡಿಕೊಂಡಿದೆ.
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಗ್ರಾಮದ ಜನರನ್ನು ತಾತ್ಕಾಲಿಕವಾಗಿ ಸ್ಥಳೀಯ ಶಾಲಾ ಕಟ್ಟಡ ಅಥವಾ ಸಾರ್ವಜನಿಕ ಕಟ್ಟಡಗಳಿಗೆ ಸ್ಥಳಾಂತರಿಸಿ ಅಗತ್ಯ ಊಟೋಪಚಾರ ಹಾಗೂ ಆರೈಕೆ ಮಾಡುವ ಸಲುವಾಗಿ 32ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಕೋವಿಡ್ ಸೊಂಕಿತರಿಗೆ ಈ 32 ಗ್ರಾಮಗಳಲ್ಲಿಯೂ ಪ್ರತ್ಯೇಕ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಸಿದ್ಧತೆಯನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ವಿವರವಾದ ವರದಿಯಲ್ಲಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಈ ಎಲ್ಲ ಕಾಳಜಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ರಬ್ಬರ್ ಬೋಟ್ ಗಳನ್ನು ಸಿದ್ದಪಡಿಸಿಟ್ಟುಕೊಳ್ಳಲಾಗಿದೆ. ಪ್ರವಾಹ ಸ್ಥಿತಿ ಉದ್ಭವಿಸುವ ಗ್ರಾಮಗಳಲ್ಲಿನ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.
ಈ ವಿಡಿಯೋ ಸಂವಾದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಪ್ರೋಬೆಷನರಿ ಐಎಎಸ್ ಅನ್ಮೋಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here