ಮಡಿಕೇರಿ -“450 ಹಾಸಿಗೆಯ ಸಾಮಥ್ರ್ಯದ ಬೋಧಕ ಆಸ್ಪತ್ರೆಯ” ಕಟ್ಟಡ ನಿರ್ಮಾಣ ಕಾಮಗಾರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಹತ್ತಿರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣಾ ಕಾರ್ಯಕ್ರಮ ಗುರುವಾರ ನಡೆಯಿತು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ರಾಮಕೃಷ್ಣ ಇನಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣಾ” ಕಾರ್ಯಕ್ರಮವು ಕೋವಿಡ್-19ರ ಪ್ರಯುಕ್ತ ಸರಳವಾಗಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ ಅಧ್ಯಕ್ಷರಾದ ಜಿನರಾಳಕರ ಭೀಮರಾವ ಲಗಮಪ್ಪ, ಇವರು ಒಟ್ಟು 57 ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಎಲ್ಲಾ ಕಾರ್ಮಿರು ನೋಂದಣಿ ಮಾಡಿಸಿಕೊಂಡು ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆಯಬೇಕು. ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸುರಕ್ಷಾ ಸಲಕರಣೆಗಳನ್ನು ಹಾಕಿಕೊಂಡು ಸುರಕ್ಷಿತವಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.
ಜಿ.ಕಾ.ಸೇ.ಪ್ರಾ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸಾ, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮಂಡ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಸಹಾಯಕ ಅಭಿಯಂತರರಾದ ರಾಜೇಶ್, ಬೆಂಗಳೂರು ರಾಮಕೃಷ್ಣ ಇನಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ನ ಯೋಜನಾ ವ್ಯವಸ್ಥಾಪಕರಾದ ಗಿರೀಶ್ ಗೌಡ, ಇತರರು ಇದ್ದರು.
ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜೋಯಪ್ಪ ಅವರು ವಂದಿಸಿದರು.