ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಾರದೊಳಗೆ ಲಸಿಕೆ- ಮಹಾಂತೇಶ್ ಬೀಳಗಿ

0
74

ದಾವಣಗೆರೆ -ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಒಂದು ವಾರದೊಳಗಾಗಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಡಿಯೋ ಸಂವಾದದ ಬಳಿಕ, ಮಾತನಾಡಿದ ಅವರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ನಿರ್ದೇಶನದಂತೆ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಒಂದು ವಾರದ ಒಳಗಾಗಿ ಕೋವಿಡ್ ನಿರೋಧಕ ಲಸಿಕೆಯನ್ನು, ಲಸಿಕೆಯ ಲಭ್ಯತೆಯ ಆಧಾರದ ಮೇಲೆ ಆದ್ಯತೆ ಮೇರೆಗೆ ನೀಡಲಾಗುವುದು. ಜಿಲ್ಲೆಯಲ್ಲಿ ಲಸಿಕೆ ನೀಡಲು ಅರ್ಹರಿರುವ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, 50132 ವಿದ್ಯಾರ್ಥಿಗಳು, 3619 ಬೋಧಕರು ಹಾಗೂ 1905 ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಒಟ್ಟು 55656 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೆ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಆರಂಭವಾಗಿದ್ದು, ಕೆಲವು ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮೊದಲನೆ ಡೋಸ್ ಲಸಿಕೆ ಪಡೆದಿರಬಹುದು. ಲಸಿಕೆ ಪಡೆಯದೆ ಇರುವ ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು. ಇದಕ್ಕಾಗಿ ಎಲ್ಲ ಕಾಲೇಜುಗಳಲ್ಲಿ ಲಸಿಕಾ ಕ್ಯಾಂಪ್ ಆಯೋಜಿಸಲಾಗುವುದು. ಲಸಿಕೆ ಲಭ್ಯತೆ ಆಧಾರದ ಮೇಲೆ ಲಸಿಕೆ ಕ್ಯಾಂಪ್ ಏರ್ಪಡಿಸುವ ಸ್ಥಳ, ದಿನವನ್ನು ಆರೋಗ್ಯ ಇಲಾಖೆ ನಿಗದಿಪಡಿಸಲಿದೆ. ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಲು ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಪದವಿ-29485 ಹಾಗೂ ಸ್ನಾತಕೋತ್ತರ ಪದವಿ-2227 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಬೇಕಿದೆ. ಈ ಕಾರ್ಯಕ್ರಮಕ್ಕೆಂದೇ ಪ್ರತ್ಯೇಕವಾಗಿ ಲಸಿಕೆಯನ್ನು ಹಂಚಿಕೆ ಮಾಡಲಾಗುವುದಿಲ್ಲ, ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಈಗಾಗಲೆ ನಡೆಯುತ್ತಿರುವ ಲಸಿಕಾ ಕಾರ್ಯಕ್ರಮದ ಜೊತೆ ಜೊತೆಗೆ, ವಿದ್ಯಾರ್ಥಿಗಳಿಗೂ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕಾಲೇಜುಗಳ ಪಟ್ಟಿಯನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಲೇಜುಗಳಲ್ಲಿ ನಡೆಸಲಾಗುವ ಲಸಿಕಾ ಕ್ಯಾಂಪ್ ಕಾರ್ಯಕ್ರಮದ ಸಂದರ್ಭದಲ್ಲಿ ಕೋವಿಡ್‍ಗೆ ಸಂಬಂಧಿಸಿದಂತೆ ಹಾಗೂ ಲಸಿಕೆ ನೀಡಿಕೆಗಾಗಿ ಸರ್ಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು, ಇದಕ್ಕಾಗಿ ಕಾಲೇಜುಗಳಲ್ಲಿ ಸೂಕ್ತ ಕೊಠಡಿಗಳನ್ನು ಪರಿಶೀಲಿಸಿ, ನಿಗದಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಗೆ ಸರ್ಕಾರದಿಂದ ಹಂಚಿಕೆ ಮಾಡಲಾಗುವ ಕೋವಿಡ್ ನಿರೋಧಕ ಲಸಿಕೆಯ ಪ್ರಮಾಣವನ್ನು ಪರಿಗಣಿಸಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಅಗತ್ಯವಿರುವ ಲಸಿಕೆಯನ್ನು ಹಂಚಿಕೆ ಮಾಡಬೇಕು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೀಡುವ ಲಸಿಕೆ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವಂತಾಗಬಾರದು, ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಶಶಿಧರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here