ಎಚ್‌ಡಿಕೆ ಅವರ ಮಾಧ್ಯಮ ಸಲಹೆಗಾರರಾದ, ಹಿರಿಯ ಪತ್ರಕರ್ತ ಕೆ.ಸಿ ಸದಾನಂದ ನಿಧನ

0
125

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ (49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ರಾತ್ರಿ ತೀವ್ರ ಅನಾರೋಗ್ಯಕ್ಕೆ ತುತ್ತಾದ ಅವರನ್ನು ತಕ್ಷಣ ಬೆಂಗಳೂರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ 12 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ತಡರಾತ್ರಿ ರಕ್ತದೊತ್ತಡದಲ್ಲಿ ಕುಸಿತ ಉಂಟಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ತಂದೆ, ಪತ್ನಿ, ಪುತ್ರ, ಬಂಧು ಬಳಗವನ್ನು ಅಗಲಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಅವರ ಜತೆ ಹಲವು ವರ್ಷಗಳಿಂದ ಇದ್ದ ಸದಾನಂದ ಅವರು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಮನ್ವಯಕಾರರಾಗಿದ್ದರು. ಬಳಿಕ ಕುಮಾರಸ್ವಾಮಿ ಅವರ ಖಾಸಗಿ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನವರಾದ ಅವರು, ಸಂಜೆವಾಣಿ, ಈ ಸಂಜೆ, ಕನ್ನಡಪ್ರಭ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿಯೇ ಅಂತ್ಯಸಂಸ್ಕಾರ ನಡೆಯಲಿದೆ. ಕುಮಾರಸ್ವಾಮಿ ಕಂಬನಿ
ತಮ್ಮ ಆತ್ಮೀಯರಾಗಿದ್ದ ಸದಾನಂದ ಅವರ ನಿಧನಕ್ಕೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ”ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ” ಎಂದು ಅವರು ಕಂಬನಿ ಮಿಡಿದಿದ್ದಾರೆ.

ಅಶ್ವತ್ಥನಾರಾಯಣ ಸಂತಾಪ
ಸದಾನಂದ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಂತಾಪ ಸೂಚಿಸಿದ್ದಾರೆ. ”ನೇರ ನಿಷ್ಠುರ ಮನೋಭಾವದ ಸದಾನಂದ ಅವರು, ‘ಸಂಜೆವಾಣಿ’, ‘ಈ ಸಂಜೆ’ ಹಾಗೂ ‘ಕನ್ನಡಪ್ರಭ’ ಪತ್ರಿಕೆಗಳಲ್ಲಿ ಕೆಲಸ ಮಾಡಿ ತಮ್ಮದೇ ಛಾಪು ಮೂಡಿಸಿದ್ದರು. ಬರವಣಿಗೆಯಲ್ಲಿ ತೀಕ್ಷ್ಣತೆ, ಬರೆಯಬೇಕಾದ್ದನ್ನು ನೇರವಾಗಿ ಮುಲಾಜಿಲ್ಲದೆ ಬರೆಯುತ್ತಿದ್ದವರು ಅವರು. ಅವರ ಅಗಲಿಕೆ ಬಹಳ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಬಂಧುಬಳಗ, ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ದಯಪಾಲಿಸಲಿ” ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here