ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೊವಿಡ್ 2ನೇ ಅಲೆ ನಿರ್ವಹಣೆ ಮಾಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಖಾತೆಯ ಇಬ್ಬರೂ ಸಚಿವರ ತಲೆದಂಡವಾಗಿದೆ. ಆರೋಗ್ಯ ಖಾತೆ ರಾಜ್ಯ ಸಚಿವ, ಕ್ಯಾಬಿನೆಟ್ ಸಚಿವರಿಗೆ ಕೊಕ್ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್, ಆರೋಗ್ಯ ಖಾತೆ ರಾಜ್ಯ ಸಚಿವ ಆಶ್ವಿನ್ ಚೌಬೆ ರಾಜೀನಾಮೆ ನೀಡಿದ್ದಾರೆ. ಕೊರೊನಾ 2ನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ಕೊರತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ರಾಜೀವ್ ಚಂದ್ರಶೇಖರ್ಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಲಭ್ಯವಾಗಿದೆ. ಮೋದಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕುತೂಹಲ ಹೆಚ್ಚಿದೆ.
ಆರೋಗ್ಯ ಸಚಿವ ಡಾ. ಹರ್ಷವರ್ಧನ್ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಉಂಟಾದ ಬಹುದೊಡ್ಡ ವೈಫಲ್ಯಕ್ಕೆ ಪಾಪದ ಹರ್ಷವರ್ಧನ್ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ನಿರ್ಣಯವನ್ನು ಟೀಕಿಸಿದ್ದಾರೆ.