ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್ಆರ್ಟಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಈ ವಿಚಾರದ ಕುರಿತು ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಸಾಮಾನ್ಯ ಹಾಗೂ ವೇಗಧೂತ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.