ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಭೆ; ಸಂತ್ರಸ್ತರ ಖಾತೆಗೆ ಪರಿಹಾರ ಜಮೆ‌ ಮಾಡಲು ಸೂಚನೆ

0
79

ಬೆಳಗಾವಿ,ಆ.07:ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗುವ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ‌ಹೊಸದಾಗಿ ಬಡವಾಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ(ಆ.6) ನಡೆದ ಕೋವಿಡ್ ಹಾಗೂ ಪ್ರವಾಹ ಸ್ಥಿತಿ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪುನರ್ವಸತಿ ಕಾಯ್ದೆ ಪ್ರಕಾರ ಸಂತ್ರಸ್ತರಿಗೆ 40×60 ಅಳತೆಯ ನಿವೇಶನದಲ್ಲಿ ಸೂರು‌ ಒದಗಿಸಲು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಹೇಳಿದರು.
ಮುಳುಗಡೆಯಾಗುವ ಗ್ರಾಮಗಳ ಜನರಿಗೆ ತಾತ್ಕಾಲಿಕ ‌ಶೆಡ್ ನಿರ್ಮಿಸಿ ಮೂಲಸೌಕರ್ಯವನ್ನು ಒದಗಿಸಬೇಕು.
ಈ ಹಿಂದೆ 2009-10 ನೇ ಸಾಲಿನಲ್ಲಿ ಪ್ರವಾಹ ಬಂದಾಗ ಕೆಲ ಗ್ರಾಮಗಳನ್ನು ಸ್ಥಳಾಂತರಿಸಿ ‘ಆಸರೆ’ ಮನೆಗಳನ್ನು ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿ‌ ಮಾಹಿತಿಯನ್ನು ಒದಗಿಸಬೇಕು ಎಂದು ತಿಳಿಸಿದರು.

ನದಿತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಕಲ್ಪಿಸಲು ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದರು.

ಪರಿಹಾರ ಆರ್.ಟಿ.ಜಿ.ಎಸ್.‌ ಮೂಲಕ ಪಾವತಿಗೆ ಸೂಚನೆ:

ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರ ಘೋಷಿಸಿರುವ ಹತ್ತು ಸಾವಿರ ರೂಪಾಯಿ ಪರಿಹಾರದ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ಆಯಾ ಕುಟುಂಬಗಳಿಗೆ ಪಾವತಿಸಬೇಕು ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಒಟ್ಟಾರೆ 7800 ಕೋಟಿ ಹಾನಿ:

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 7800 ಕೋಟಿ ರೂಪಾಯಿ ಹಾನಿಯಾಗಿದೆ.
21300 ವಿದ್ಯುತ್ ಕಂಬಗಳು‌‌ ಹಾಗೂ 5300 ಟ್ರಾನ್ಸ್ ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ‌ ಅಂದಾಜು ಮಾಡಬೇಕು ಎಂದು ತಿಳಿಸಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ರವಾಹದಿಂದ ಜಿಲ್ಲೆಯಲ್ಲಿ ಬೆಳೆ, ರಸ್ತೆ, ಆಸ್ಪತ್ರೆ-ಶಾಲಾ ಕಟ್ಟಡಗಳು ಇತರೆ ಮೂಲಸೌಕರ್ಯ ಸೇರಿದಂತೆ ಒಟ್ಟಾರೆ ಅಂದಾಜು 2…. ಕೋಟಿ ರೂಪಾಯಿಗಿಂತ ಅಧಿಕ ನಷ್ಟವಾಗಿದೆ. ಸಮೀಕ್ಷೆಯ ಬಳಿಕ ಖಚಿತ ಮಾಹಿತಿ ‌ಲಭಿಸಲಿದೆ ಎಂದು ತಿಳಿಸಿದರು.

ಜಂಟಿ‌ ಸಮೀಕ್ಷೆ ಕೂಡಲೇ ಪೂರ್ಣಗೊಳಿಸಬೇಕು. ಜಮೀನಿನಲ್ಲಿ ನೀರಿರುವುದರಿಂದ ಒಂದು ವೇಳೆ ಸಮೀಕ್ಷೆಗೆ ಅಡ್ಡಿಯಾದರೆ ಜಿ.ಪಿ.ಎಸ್.ಆಧಾರಿತ ಸಮೀಕ್ಷೆಯ ಸಾಧ್ಯತೆ ಕುರಿತು ಪರಿಶೀಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಸಲಹೆ ನೀಡಿದರು.

ಮಳೆಯಿಂದ ವಿದ್ಯುತ್ ಪೂರೈಕೆ ತೊಂದರೆಯಾದ ಕಡೆಗಳಲ್ಲಿ ತಕ್ಷಣವೇ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು. ಒಂದು ವೇಳೆ ಪ್ರವಾಹ ಉಂಟಾದರೆ ನಂತರದ ದಿನಗಳಲ್ಲಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಅಗತ್ಯ ಪರಿಕರಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ರೈತರಿಗೆ ವಿದ್ಯುತ್ ಟಿಸಿ ಒದಗಿಸುವ ಸಂದರ್ಭದಲ್ಲಿ ಉಂಟಾಗುವ ತೊಂದರೆಗಳನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು.
ಟಿಸಿ‌ ದುರಸ್ತಿ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.
ಟಿಸಿ ದುರಸ್ತಿಗೆ‌ ಸಂಬಂಧಿಸಿದಂತೆ ಸ್ಪರ್ಧಾತ್ಮಕ ವಾತಾವರಣ ಸೃಷಗಟಿಸಿದರೆ ರೈತರಿಗೆ ತುರ್ತಾಗಿ ಗುಣಮಟ್ಟದ ಸೇವೆ ದೊರಕುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.

ಕೋವಿಡ್ 3 ನೇ ಅಲೆ ಸೂಕ್ತ ಸಿದ್ಧತೆಗೆ ಸೂಚನೆ:

ಕೋವಿಡ್ ಸಂಭವನೀಯ ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕಾಗಿ ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ, ತಾಲ್ಲೂಕು ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 418 ಹಾಸಿಗೆಗಳು ಲಭ್ಯವಿವೆ. ಆದರೆ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುವಂತೆ ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಬೇಕು.
ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯ ಕೆಲಸ ತ್ವರಿತವಾಗಿ ಆಗಬೇಕು ಎಂದು ಸೂಚನೆ ನೀಡಿದರು.
ಬಾಕಿ ಉಳಿದಿರುವ ಆಕ್ಸಿಜನ್ ಘಟಕಗಳ ಸ್ಥಾಪನೆ ಹಾಗೂ ತುರ್ತು ನಿರ್ವಹಣೆಗೆ ಅನುಕೂಲವಾಗುವಂತೆ ಸ್ಥಳೀಯ ಉತ್ತಮ ಕಂಪನಿಗಳಿಗೆ ಕಾರ್ಯಾದೇಶ ನೀಡುವಂತೆ ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜತೆಗೆ ಗುಣಮಟ್ಟದ ಚಿಕಿತ್ಸೆಗಾಗಿ ಅಗತ್ಯ ತಜ್ಞ ವೈದ್ಯರು‌ ಮತ್ತು ಸಿಬ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ಯಾರಾ ಮೆಡಿಕಲ್ ತರಬೇತಿ ನೀಡುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂದರು.

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ರವಾಹದಿಂದ ಜಿಲ್ಲೆಯಲ್ಲಿ ಬೆಳೆ, ಮೂಲಸೌಕರ್ಯ ಸೇರಿದಂತೆ ಒಟ್ಟಾರೆ ಅಂದಾಜು 7800 ಕೋಟಿ ರೂಪಾಯಿಗಿಂತ ಅಧಿಕ ನಷ್ಟವಾಗಿದೆ. ಸಮೀಕ್ಷೆಯ ಬಳಿಕ ಖಚಿತ ಮಾಹಿತಿ ‌ಲಭಿಸಲಿದೆ ಎಂದು ತಿಳಿಸಿದರು.

ಮಳೆಯಿಂದ ಚಿಕ್ಕೋಡಿ ವಿಭಾಗದಲ್ಲಿ ತೊಂದರೆಯಾಯಿತು. ಸಕಾಲದಲ್ಲಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಹಾನಿಯ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಯಿತು ಎಂದರು.
ಅಥಣಿ ಭಾಗದಲ್ಲಿ 22 ಹಳ್ಳಿಗಳು ಜಲಾವೃತಗೊಂಡಿದ್ದವು. 230 ತಾತ್ಕಾಲಿಕ ಶೆಡ್ ನಿರ್ಮಿಸಿ ಜನರಿಗೆ ತುರ್ತು ವಸತಿ ಕಲ್ಪಿಸಲಾಗಿದೆ.
ಆದ್ಯತೆ ಮೇರೆಗೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ಆರ್.ಟಿ.ಜಿ.ಎಸ್. ಮೂಲಕ ನಿರ್ಧಾರ. ಈಗಾಗಲೇ ಬಹುತೇಕ ಪಟ್ಟಿ ಸಿದ್ಧಗೊಂಡಿದೆ. ಬೆಳೆಹಾನಿ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ.
ಆಗಸ್ಟ್ 15 ರ ವೇಳೆಗೆ ಮಳೆಯಿಂದ ಉಂಟಾಗಿರುವ ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಅಗತ್ಯ:

ನದಿತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ. ‌ಈ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಮಾಡಬೇಕಿದೆ ಎಂದು ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಸಚಿವರ ಗಮನಸೆಳೆದರು.

ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ಪ್ಯಾರಾ ಮೆಡಿಕಲ್ ತರಬೇತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು.
ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಮಾತ್ರೆಗಳನ್ನು ಖರೀದಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಮಳೆಯಿಂದ ಉಂಟಾದ ಮನೆಹಾನಿಯ ಸಮೀಕ್ಷೆ ಮಾಹಿತಿಯನ್ನು ಅಪ್ ಲೋಡ್ ಮಾಡಲು ನಿಗದಿಪಡಿಸುವ ಸಮಯವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ದರ್ಶನ್ ಅಭಿಪ್ರಾಯಪಟ್ಟರು.

5.59 ಲಕ್ಷ ಜನರ ಕೋವಿಡ್ ಪರೀಕ್ಷೆ. 496 ಪಾಸಿಟಿವ್ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಸದ್ಯಕ್ಕೆ ಶೇ.0.84 ರಷ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣಪ್ರಮಾಣ ಶೇ.2.34 ರಷ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.
460 ಬ್ಲ್ಯಾಕ್ ಫಂಗಸ್ ಇದರಲ್ಲಿ 300 ಕ್ಕೂ ಅಧಿಕ ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 49 ಜನರು ಬ್ಲ್ಯಾಕ್ ಫಂಗಸ್ ನಿಂದ ಮರಣ ಹೊಂದಿದ್ದಾರೆ.

ಮಾಸ್ಕ್, ಪಿಪಿಇ ಕಿಟ್ ಸೇರಿದಂತೆ ಸಂಭವನೀಯ ಮೂರನೇ ಅಲೆ ಹಿನ್ನೆಲೆಯಲ್ಲಿ ರೆಮಿಡಿಸಿವಿರ್ ಹಾಗೂ ಇನ್ನಿತರ ಅಗತ್ಯ ಔಷಧಿಗಳ ದಾಸ್ತಾನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ 18 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 199 ಕಾಳಜಿ ಕೇಂದ್ರದಲ್ಲಿ ಕೂಡ 30 ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.ಗಡಿಭಾಗದ ಹಳ್ಳಿಗಳಲ್ಲಿ ಹೆಚ್ಚುವರಿ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಡಾ.ಐ.ಪಿ.ಗಡಾದ ವಿವರಿಸಿದರು.

ಜಿಲ್ಲೆಯ ಒಟ್ಟಾರೆ 6.91 ಹೆಕ್ಟೇರ್ ಬಿತ್ತನೆ ಬೆಳೆಯ ಪೈಕಿ ಸೋಯಾಬಿನ್, ಕಬ್ಬು, ಹೆಸರು ಮತ್ತಿತರ ಬೆಳೆಹಾನಿಯಾಗಿದೆ.‌ ಬೆಳೆಹಾನಿ ಜಂಟಿ‌ ಸಮೀಕ್ಷೆ ಆರಂಭಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಹೊಸಮನಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ್ ಆಮಟೆ, ಅಪರ ಜಿಲ್ಲಾ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here