ಕಾಳುಮೆಣಸಿನ ಸಸ್ಯ ಅರೋಗ್ಯ ನಿರ್ವಹಣೆಗೆ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹದ ಬಳಕೆಗೆ ಸಲಹೆ

0
110

ಮಡಿಕೇರಿ ಆ.31:-ಗೋಣಿಕೊಪ್ಪಲು ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಇವರು ಕಾಳು ಮೆಣಸಿನ ಸಸ್ಯ ಅರೋಗ್ಯ ನಿರ್ವಹಣೆಗೆ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಎಂಬ ಸೂಕ್ಷ್ಮಾಣು ಜೀವಿಗಳ ಗೊಬ್ಬರವನ್ನು ಬಳಸಲು ಶಿಫಾರಸ್ಸು ಮಾಡಿರುತ್ತಾರೆ. ಆದ್ದರಿಂದ ಜಿಲ್ಲೆಯ ರೈತರು ಈ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿನಲ್ಲಿ ಬಳಸಿ ಇಳುವರಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕೃಷಿ ವಿಜ್ಞಾನ ಕೇಂದ್ರ ರೈತರಲ್ಲಿ ಮನವಿಯನ್ನು ಮಾಡಿದೆ.
ಈ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಶೀಘ್ರ ಸೊರಗು ರೋಗವನ್ನು ಹತೋಟಿ ಮಾಡಲು, ಬಳ್ಳಿ ಹಳದಿಯಾಗುವುದನ್ನು ತಪ್ಪಿಸಲು ಮತ್ತು ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆಮಾಡಲು ಸಹಾಯವಾಗುತ್ತದೆ.
ಈ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವು ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಗುಣ ವಿಶೇಷತೆಯ ಪ್ರಾಮುಖ್ಯತೆ ಪಡೆದಿರುತ್ತವೆ. ಪ್ರಸ್ತುತ ಸೂಕ್ಷ್ಮಾಣು ಜೀವಿಗಳ ಬಳಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದಿರುವುದರಿಂದ, ಜೈವಿಕ ಸಂಪನ್ಮೂಲಗಳ ಮತ್ತು ತಂತ್ರಜ್ಞಾನದ ಕೊರೆತೆಯಿಂದಾಗಿ ಸೂಕ್ಷ್ಮಾಣು ಜೀವಿಗಳ ಬಳಕೆ ಕಡಿಮೆಯಾಗಿದೆ. ಈ ಕೊರತೆಯನ್ನು ನೀಗಿಸಲು ಮತ್ತು ಒಂದೇ ರೀತಿಯ ಸೂಕ್ಷ್ಮಾಣು ಜೀವಿಗಳ ಬಳಕೆಯಿಂದ ಉಂಟಾಗುವ ಅಧಿಕ ಖರ್ಚು ಮತ್ತು ಕಡಿಮೆ ಕಾರ್ಯ ಕ್ಷಮತೆಯ ನ್ಯೂನತೆಯನ್ನು ಹೋಗಲಾಡಿಸಲು ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ, ಬೆಂಗಳೂರು, ಇವರ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಉತ್ಕೃಷ್ಟ ತಂತ್ರಜ್ಞಾನದೊಂದಿಗೆ ಅಭಿವೃದ್ದಿಪಡಿಸಿರುತ್ತಾರೆ. ಈ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವು ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲುವಿನಲ್ಲಿ ಲಭ್ಯವಿದ್ದು ಜಿಲ್ಲೆಯ ರೈತರು ಇದರ ಪ್ರಯೋಜನ ಪಡೆಯಬಹುದು.

ಸೂಕ್ಷ್ಮಾಣು ಜೀವಿಗಳ ಸಮೂಹದ ಉಪಯೋಗಗಳು: ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ (ಅಜಟೋಬ್ಯಾಕ್ಟರ್ ಟ್ರೋಪಿಕಾಲಸ್, ಬೆಸಿಲ್ಲಸ್ ಆರ್ಯಭಟ ಮತ್ತು ಸುಡೋಮೋನಾಸ್ ಥಾಯ್ವಾನೆನ್ಸಿಸ್) ಕಾರ್ಯಕ್ಷಮತೆ ಹೊಂದಿದೆ.
ಈ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೊರಗು ರೋಗವನ್ನು ಹತೋಟಿ ಮಾಡಲು, ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆ ಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗುತ್ತದೆ. ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹದ ಬಳಕೆಯಿಂದ ಸಸ್ಯದ ಬೆಳವಣಿಗೆ, ರೋಗ ನಿಯಂತ್ರಣ ಮತ್ತು ಇಳುವರಿ ಅಧಿಕಗೊಳ್ಳುತ್ತದೆ. ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬೀಜೋಪಚಾರ, ಕೊಟ್ಟಿಗೆ ಗೊಬ್ಬರ ಮತ್ತು ಬೇವಿನ ಹಿಂಡಿಯ ಜೊತೆ ಮಿಶ್ರಣಮಾಡಿ ಬಳಸಬಹುದು.

ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ ಸೂಕ್ಷ್ಮಾಣು ಜೀವಿಗಳನ್ನು ಬೇರೆ ಬೇರೆಯಾಗಿ ಹಾಕುವ ಅವಶ್ಯಕತೆಯಿಲ್ಲದೆ ರೈತರು ವಿವಿಧ ಬೆಳೆಗಳಿಗೆ ಬಳಸಬಹುದು. ಶಿಫಾರಸ್ಸು ಮಾಡಿದ ಸಾರಜನಕ ಮತ್ತು ರಂಜಕಯುಕ್ತ ಗೊಬ್ಬರಗಳಲ್ಲಿ ಶೇ. 25 ರಷ್ಟು ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬಳಸುವ ವಿಧಾನ ಕೊಟ್ಟಿಗೆ ಗೊಬ್ಬರ ಅಥವಾ ಕಹಿಬೇವಿನ ಹಿಂಡಿಗೆ ಸೇರಿಸುವ ವಿಧಾನ: 5 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 500 ಕೆ.ಜಿ ಕೊಟ್ಟಿಗೆ ಗೊಬ್ಬರ ಅಥವಾ 2 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 100 ಕೆ.ಜಿ ಕಹಿಬೇವಿನ ಹಿಂಡಿಯ ಜೊತೆ ಚೆನ್ನಾಗಿ ಮಿಶ್ರಣ ಮಾಡಿ ಕಾಳುಮೆಣಸು ಬೆಳೆಗಳಿಗೆ ಉಪಯೋಗಿಸಬೇಕು.

ಬೆಳೆಗಳಿಗೆ ನೇರವಾಗಿ ಉಪಯೋಗಿಸುವ ವಿಧಾನ: 4 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ, ಒಂದು ಕೆ.ಜಿ ಬೆಲ್ಲ, 10 ಲೀಟರ್ ಗಂಜಳ ಮತ್ತು 10 ಕೆ.ಜಿ ಸಗಣಿಯನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ 12 ಗಂಟೆಗಳ ಕಾಲ ಇಟ್ಟು ಕಾಳುಮೆಣಸಿನ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್‍ನಷ್ಟು) ಸೆಪ್ಟಂಬರ್-ಅಕ್ಟೋಬರ್ ತಿಂಗಳಿನಲ್ಲಿ ಸುರಿಯಬೇಕು.
ಹೆಚ್ಚಿನ ಮಾಹಿತಿಗೆ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: 08274-295274 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here