ಮಡಿಕೇರಿ ಸೆ.08 :-ಕಾರ್ಮಿಕ ಅದಾಲತ್ ಪ್ರಯುಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪ್ರತೀ ರಕ್ಷಣಾ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ವಿರಾಜಪೇಟೆಯ ನ್ಯಾಯಾಲಯ ಆವರಣದಲ್ಲಿ ಇತ್ತೀಚೆಗೆ ನಡೆಯಿತು. ವಿರಾಜಪೇಟೆಯ ಎರಡನೇ ಅಪರ ಮತ್ತು ಜಿಲ್ಲಾ ನ್ಯಾಯಾಧೀಶರಾದ ಎಸ್.ಆರ್.ದಿಂಡಲ್ ಕೊಪ್ಪ ಅವರು ಮಾತನಾಡಿ ಸರ್ಕಾರ ಕಾರ್ಮಿಕರಿಗೆ ಹಲವು ಸೌಲಭ್ಯ ಕಲ್ಪಿಸುತ್ತಿದ್ದು, ಅದನ್ನು ಬಳಸಿಕೊಳ್ಳುವಂತೆ ಅವರು ಸಲಹೆ ಮಾಡಿದರು.
ಕಾರ್ಮಿಕರು ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನ್ಯಾಯಾಧೀಶರು ತಿಳಿಸಿದರು.
ವಿರಾಜಪೇಟೆ ತಾಲ್ಲೂಕು ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಸಂದರ್ಭದಲ್ಲಿ ಹಲವು ಸೌಕರ್ಯಗಳನ್ನು ಒದಗಿಸುತ್ತಿದ್ದು, ಇದನ್ನು ಬಳಸಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಕಾರ್ಮಿಕ ಅದಾಲತ್ ಮೂಲಕ ಆಹಾರ ಭದ್ರತೆ ಒದಗಿಸುವುದು, ಕಾರ್ಮಿಕರ ಕುಂದು ಕೊರತೆ ನಿವಾರಿಸುವುದು ಮತ್ತಿತರ ಬಗ್ಗೆ ವಿಶೇಷ ಗಮನಹರಿಸಲಾಗಿದೆ ಎಂದು ಅವರು ಹೇಳಿದರು.
ಹಾಗೆಯೇ ವಿರಾಜಪೇಟೆ, ಗೋಣಿಕೊಪ್ಪ ಇತರೆ ಕಡೆಗಳಲ್ಲಿ ಕಟ್ಟಡ ಕಾರ್ಮಿಕರು ವಾಸಿಸುವ ಕಾಲೋನಿಗೆ ತೆರಳಿ ಸುರಕ್ಷಾ ಕಿಟ್ ವಿತರಿಸಿ ಕೋವಿಡ್-19 ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ವಿರಾಜಪೇಟೆಯ ದಂತ ವೈದ್ಯಕೀಯ ಕಾಲೇಜು ಬಳಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು.
ವಿರಾಜಪೇಟೆ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ವಿ.ಕೋನಪ್ಪ, ವಿರಾಜಪೇಟೆ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಸಿ.ಮಹಾಲಕ್ಷ್ಮಿ, ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಐ.ಆರ್.ಪ್ರಮೋದ್ ಇತರರು ಇದ್ದರು.