ಸ್ವಚ್ಛತಾ ಮಾಸಾಚರಣೆ ಅಭಿಯಾನದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ನಾಗೇಂದ್ರ ಹೊನ್ನಳ್ಳಿ

0
123

ಶಿವಮೊಗ್ಗ, ಅ.01: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಸ್ವಚ್ಛತಾ ಮಾಸಾಚರಣೆ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಅನುಷ್ಟಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸ್ವಚ್ಛತಾ ಮಾಸಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ, ಬಳಸಿದ ಪ್ಲಾಸ್ಟಿಕ್ ಸಂಗ್ರಹಣೆ, ಈ ವೇಸ್ಟ್ ವಿಲೇವಾರಿ ಮತ್ತು ತ್ಯಾಜ್ಯ ವಸ್ತುಗಳ ಮರು ಬಳಕೆ ಮಾಡುವ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಸಹ ಕೈಗೊಳ್ಳಬೇಕು. ಸ್ವಚ್ಛತಾ ಅಭಿಯಾನವನ್ನು ಸ್ಥಳೀಯ ಸಂಸ್ಥೆಗಳು, ಧಾರ್ಮಿಕ ಮುಖಂಡರು, ಕಾರ್ಪೊರೇಟ್ ಕಂಪೆನಿಗಳು, ಯುವಕ ಮತ್ತು ಯುವತಿ ಸಂಘಗಳು, ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಬೇಕು. ನಿರಂತರ ಸ್ವಚ್ಛತೆಯನ್ನು ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಸಹ ಈ ಅವಧಿಯಲ್ಲಿ ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದರು.

ಸ್ವಚ್ಛತಾ ಅಭಿಯಾನವನ್ನು ನಗರ ಪ್ರದೇಶದಲ್ಲಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿಯೂ ಅನುಷ್ಟಾನಗೊಳಿಸಬೇಕು. ಒಂದು ತಿಂಗಳ ಕಾಲ ಪ್ರತಿ ದಿನ ಕಾರ್ಯಕ್ರಮಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ಇಲಾಖೆಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ, ಮಾರುಕಟ್ಟೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಕಡೆಗಳಲ್ಲಿ ಸ್ವಚ್ಛತಾ ಕಾರ್ಯದ ಜತೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕೇಂದ್ರಗಳ ಸುತ್ತಮುತ್ತಲು ಸ್ವಚ್ಛತಾ ಕಾರ್ಯವನ್ನು ಧಾರ್ಮಿಕ ಮುಖಂಡರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಕೈಗೊಳ್ಳಬೇಕು ಎಂದು ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವ: ಸ್ವಾತಂತ್ರ್ಯದ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷವಿಡೀ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಂದು ಇಲಾಖೆಗಳು ತಮ್ಮ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಅಂಶಗಳನ್ನು ಸಹ ಅದರಲ್ಲಿ ಸೇರಿಸಿ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದು ಅವರು ಹೇಳಿದರು.

ಯೋಜನಾ ನಿರ್ದೇಶಕ ಕರಿಭೀಮಣ್ಣನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಡಿಡಿಪಿಐ ರಮೇಶ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here