ನಾಗರಿಕ ಸೌಹಾರ್ದ ಸಮನ್ವಯ ಸಭೆ, ಸರ್ಕಾರದ ಮಾರ್ಗಸೂಚಿಯಂತೆ ದಸರಾ, ಈದ್‍ಮಿಲಾದ್ ಹಬ್ಬಗಳ ಆಚರಣೆ- ಮಹಾಂತೇಶ್ ಬೀಳಗಿ.

0
146

ದಾವಣಗೆರೆ, ಅ.11:ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದಸರಾ ಹಾಗೂ ಈದ್‍ಮಿಲಾಬ್ ಹಬ್ಬಗಳ ಆಚರಣೆಗಾಗಿ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಿಕೊಂಡು, ಸೌಹಾರ್ದಯುತವಾಗಿ ದಸರಾ ಹಾಗೂ ಈದ್‍ಮಿಲಾದ್ ಹಬ್ಬಗಳನ್ನು ಆಚರಿಸೋಣ, ಯಾವುದೇ ಸಾಮೂಹಿಕ ಮೆರವಣಿಗೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ದಸರಾ, ಈದ್‍ಮಿಲಾದ್ ಹಬ್ಬಗಳ ಆಚರಣೆ ನಿಮಿತ್ಯ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ನಾಗರಿಕ ಸೌಹಾರ್ದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ನಂತಹ ಮಾರಕ ಸೋಂಕು ರೋಗ ಇಲ್ಲದ ಸಂದರ್ಭಗಳಲ್ಲಿ ನಾವು ಎಲ್ಲ ಹಬ್ಬಗಳನ್ನು ಸಾಂಪ್ರದಾಯಿಕವಾಗಿ ವಿಜೃಭಣೆಯ ಮೆರವಣಿಗೆ ಸಹಿತ ಆಚರಿಸಿದ್ದೇವೆ. ಆದರೆ ಕೋವಿಡ್ ಸೋಂಕು ಕಳೆದೆರಡು ವರ್ಷಗಳಿಂದ ಇಂತಹ ವಿಜೃಂಭಣೆಯ ಆಚರಣೆಗಳಿಗೆ ತಡೆಹಾಕಿದ್ದು, ಎಲ್ಲರ ಆರೋಗ್ಯ ದೃಷ್ಟಿಯಿಂದ, ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸುವುದು ಅನಿವಾರ್ಯವಾಗಿದೆ. ಈ ಹಿಂದೆಯೂ ಕೂಡ ಎಲ್ಲ ಸಮಾಜದವರೂ, ಸರ್ಕಾರದ ಆದೇಶಗಳಂತೆ ಹಬ್ಬಗಳನ್ನು ಸರಳವಾಗಿ ಆಚರಿಸಿ, ಸಹಕರಿಸಿದ್ದರ ಫಲವಾಗಿ ಇದೀಗ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಆದಾಗ್ಯೂ ತಜ್ಞರ ಎಚ್ಚರಿಕೆ ಮೇರೆಗೆ ಮುಂಜಾಗ್ರತೆ ವಹಿಸುವುದು ಅನಿವಾರ್ಯವಾಗಿದೆ. ಈ ಬಾರಿಯ ದಸರಾ ಹಾಗೂ ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ಹಾಕಿದ್ದು, ನಿರ್ಬಂಧ ಸಡಿಲಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿಲ್ಲ, ಆದರೆ ಅಗತ್ಯಬಿದ್ದರೆ ಇನ್ನಷ್ಟು ನಿರ್ಬಂಧ ವಿಧಿಸಲು ಅವಕಾಶ ನೀಡಿದೆ. ಹೀಗಾಗಿ ಅ. 15 ರವರೆಗಿನ ದಸರಾ ಹಾಗೂ ಅ. 20 ರಂದು ಈದ್‍ಮಿಲಾದ್ ಎರಡೂ ಹಬ್ಬಗಳ ಆಚರಣೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಆಚರಿಸೋಣ, ಸರ್ಕಾರದ ಮಾರ್ಗಸೂಚಿಯಂತೆ ಎರಡೂ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಬಗೆಯ ಸಾಮೂಹಿಕ ಮೆರವಣಿಗೆಗೆ ಅವಕಾಶ ಇರುವುದಿಲ್ಲ, ಈ ಆದೇಶವನ್ನು ಎಲ್ಲರೂ ಪಾಲಿಸಿ, ಸೌಹಾರ್ದಯುತವಾಗಿ ಹಬ್ಬ ಆಚರಿಸೋಣ, ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ಮಾತನಾಡಿ, ದಸರಾ ಹಾಗೂ ಈದ್‍ಮಿಲಾದ್ ಹಬ್ಬಗಳ ಆಚರಣೆಯನ್ನು ಭಕ್ತಿಪೂರ್ವಕ ಹಾಗೂ ಸೌಹಾರ್ದಯುತವಾಗಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಆಚರಿಸೋಣ. ಹಬ್ಬಗಳ ಆಚರಣೆ ನಮಗೂ ಸಹ ಖುಷಿ ತರುವ ವಿಷಯವೇ ಆಗಿದ್ದು, ವಿಜೃಂಭಣೆಯ ಮೆರವಣಿಗೆಗಳನ್ನು ನಿರ್ಬಂಧಿಸುವುದರಿಂದ ನಮಗೂ ಕೂಡ ಖುಷಿ ದೊರೆಯುವುದಿಲ್ಲ. ಆದರೆ ಅನಿವಾರ್ಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲೇಬೇಕಿದೆ. ಕಳೆದೆರಡು ವರ್ಷಗಳಿಂದ ಎಲ್ಲರೂ ಸಹಕರಿಸಿದ್ದಾರೆ. ಈ ಬಾರಿಯೂ ಎಲ್ಲರೂ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಮಾರಕ ರೋಗ ನಿಯಂತ್ರಣಗೊಂಡಲ್ಲಿ, ಎಲ್ಲರೂ ವಿಜೃಂಭಣೆಯಿಂದ ಮೆರವಣಿಗೆ ಸಹಿತ ಆಚರಿಸಬಹುದು ಎಂದು ಹೇಳಿದರು.
ಡಿವೈಎಸ್‍ಪಿ ಬಸವರಾಜ್ ಅವರು ದಸರಾ ಹಾಗೂ ಈದ್‍ಮಿಲಾದ್ ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಸಂದರ್ಭದಲ್ಲಿ ತಿಳಿಸಿದರು.
ದಸರಾ ಹಬ್ಬಕ್ಕೆ ಮಾರ್ಗಸೂಚಿ : ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಿಲ್ಲಿ ಅ.7 ರಿಂದ ಅ.15 ಶುಕ್ರವಾರದವರೆಗೆ ಒಟ್ಟು 9 ದಿನಗಳ ಕಾಲ ಆಚರಿಸುವ ದಸರಾ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ. ಮೈಸೂರು ಹೊರತಾಗಿ ರಾಜ್ಯದ ಇತರೆಡೆ ನಡೆಸುವ ದಸರಾ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-19 ಸೋಂಕು ತಡೆಗಟ್ಟಲು ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ ಅಥವಾ ಪ್ರಾಧಿಕಾರಗಳಿಂದ ಹೊರಡಿಸಲಾಗಿರುವ ಎಲ್ಲಾ ಆದೇಶ ಅಥವಾ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಹಬ್ಬ ಹರಿದಿನಗಳಲ್ಲಿ ಸಮಾಜದಲ್ಲಿ ಶಾಂತಿ ಸಔಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗದೆ ಪೂರಕವಾಗಿರುವ ದಸರಾ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. ರಾಜ್ಯದ್ಯಂತ ಆಚರಿಸಲಾಗುವ ನಾಡಹಬ್ಬ ದಸರಾ ತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಿಸಿದ ಪ್ರಾಧಿಕಾರಗಳು ಆಗಿದಾಂಗೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚನೆ ನೀಡಿದರು.
ಈದ್‍ಮಿಲಾದ್ ಹಬ್ಬ ಆಚರಣೆ ಮಾರ್ಗಸೂಚಿ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷದ ಈದ್‍ಮಿಲಾದ್ ಹಬ್ಬವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು. ಅ. 20 ರಂದು ಆಚರಿಸಲಾಗುವ ಈದ್‍ಮಿಲಾದ್ ಹಬ್ಬ ಆಚರಣೆಯಲ್ಲಿ ಸಾಮೂಹಿಕ ಮೆರೆವಣಿಗೆಯನ್ನು ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳಲ್ಲಿ 100 ಕ್ಕಿಂತ ಹೆಚ್ಚು ಜನ ಒಮ್ಮೆಲೆ ಸೇರುವಂತಿಲ್ಲ, ಸಾಮೂಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್ ಶಿಷ್ಠಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಹಬ್ಬ ಆಚರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್ ಸೌಂಡ್ (ಡಿಜೆ) ಬಳಕೆ ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ನಡೆಸಬೇಕು, ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಂಡು, ಆಗಾಗ ಸೋಪು, ಸ್ಯಾನಿಟೈಸರ್ ಬಳಸಬೇಕು, ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡುವ ವ್ಯವಸ್ಥೆ ಮಾಡಬೇಕು.
ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ, ಹಾಗೂ ಮುಸ್ಲಿಂ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ಹಬ್ಬಗಳನ್ನು ಆಚರಿಸುವ ಮೂಲಕ ನಾವು ಸಹಕಾರ ನೀಡುತ್ತೇವೆ ಎಂದು ಹೇಳಿದರು. ಅಲ್ಲದೆ ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದಲ್ಲಿದ್ದು, ಎರಡೂ ಹಬ್ಬಗಳಿಗೆ ಮೆರವಣಿಗೆ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡರು. ಆದರೆ ಜಿಲ್ಲಾಧಿಕಾರಿಗಳು ಮತ್ತು ಎಸ್‍ಪಿ ಅವರು ಸರ್ಕಾರದ ಮಾರ್ಗಸೂಚಿಯಂತೆ ಮೆರವಣಿಗೆಗೆ ಅವಕಾಶವಿಲ್ಲ ಎಂದು ಮನವರಿಕೆ ಮಾಡಿಕೊಟ್ಟರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೀವ್ ಸೇರಿದಂತೆ ಎಲ್ಲ ಡಿವೈಎಸ್‍ಪಿಗಳು, ಪೊಲೀಸ್ ಇಲಾಖೆ ವಿವಿಧ ಅಧಿಕಾರಿಗಳು, ಹಿಂದೂ ಹಾಗೂ ಮುಸ್ಲಿಂ ಸಮಾಜದ ಹಲವು ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here