ಮಕ್ಕಳ ಪಾಲನೆ, ಪೋಷಣೆ ಮತ್ತು ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಸುಬ್ರಮಣ್ಯ

0
131

ಮಡಿಕೇರಿ ನ.04 :-ಮಕ್ಕಳ ಪಾಲನೆ, ಪೋಷಣೆ ಮತ್ತು ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ತಿಳಿಸಿದ್ದಾರೆ.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ‘ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ’ ಕುರಿತು ಭಾರತೀಯ ವಿದ್ಯಾಭವನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಸಾರ್ವಜನಿಕ ಅಹವಾಲು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ, ಮಕ್ಕಳಿಗೆ ಇರುವ ಜೀವಿಸುವ ಹಕ್ಕನ್ನು ನೀಡಬೇಕಿದೆ. ಆ ನಿಟ್ಟಿನಲ್ಲಿ ಮಕ್ಕಳ ಪಾಲನೆ, ಪೋಷಣೆ ಮತ್ತು ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಬೇಕು ಎಂದರು.
ಕಳೆದ ಎರಡು ವರ್ಷದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಪ್ರತಿಯೊಬ್ಬರನ್ನು ಕಾಡುತ್ತಿದೆ. ಕೋವಿಡ್-19 ನಿಂದ ಹಲವರು ಮೃತಪಟ್ಟಿದ್ದಾರೆ. ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದ್ದು, ಆ ನಿಟ್ಟಿನಲ್ಲಿ ಮಕ್ಕಳ ಯೋಗಕ್ಷೇಮದ ಬಗ್ಗೆ ಗಮನಹರಿಸಬೇಕಿದೆ ಎಂದರು.
ನಿರ್ಗತಿಕ ಮಕ್ಕಳು ಶೋಷಣೆಗೆ ತುತ್ತಾಗುವ ಸಾಧ್ಯತೆ ಇದ್ದು, ಮಕ್ಕಳ ಮೇಲಾಗುವ ಶೋಷಣೆ ಮತ್ತು ದೌರ್ಜನ್ಯವನ್ನು ತಪ್ಪಿಸುವ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಮುಂದಾಗಬೇಕಿದೆ. ನಿರ್ಗತಿಕ ಮಕ್ಕಳಿಗೆ ಪುನರ್ ವಸತಿ ಕಲ್ಪಿಸಬೇಕಿದೆ ಎಂದರು.
ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಮಾಹಿತಿ ಇದ್ದಲ್ಲಿ ಮಹಿಳಾ ರಕ್ಷಣಾ ಘಟಕಕ್ಕೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ಕೋರಿದರು.
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಮಕ್ಕಳ ನ್ಯಾಯ ಕಾಯ್ದೆ ಅನುಷ್ಠಾನಗೊಳಿಸಬೇಕು. ಬಾಲ್ಯ ವಿವಾಹ ನಿಷೇಧ ಮಾಡಬೇಕು. ಮಕ್ಕಳಿಗೆ ಇರುವ ಕಾನೂನು ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ಸಲಹೆ ಮಾಡಿದರು.
ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಎನ್.ಸುಬ್ರಮಣ್ಯ ಅವರು ಹೇಳಿದರು.
ಮೈಸೂರು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿ ಮಕ್ಕಳ ಸಮಗ್ರ ಬೆಳವಣಿಗೆಗೆ ಪ್ರತಿಯೊಬ್ಬರೂ ಗಮನಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.
ಮಕ್ಕಳು ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆ ಮತ್ತು ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೋಷಕರು ಮುಂದಾಗಬೇಕು ಎಂದರು.
ಪ್ರತಿಯೊಬ್ಬರೂ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಲ್ಲಿ ಭಯ ಉಂಟುಮಾಡಬಾರದು. ಮಕ್ಕಳ ಹಲವು ಸಮಸ್ಯೆಗಳನ್ನು ಪರಿಹರಿಸಿ ಮಕ್ಕಳ ಬೆಳವಣಿಗೆಗೆ ಬೆಳಕು ಚೆಲ್ಲುವಂತಾಗಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಲತೀಫ್ ಅವರು ಮಾತನಾಡಿ ಕೋವಿಡ್ ಪೂರ್ವದಲ್ಲಿ ಮಕ್ಕಳು ಆಟ, ಪಾಠ, ಪ್ರವಚನ, ಹೀಗೆ ಲವ ಲವಿಕೆಯಿಂದ ಇರುತ್ತಿದ್ದರು. ಆದರೆ ಕೋವಿಡ್ ನಂತರ ಮಕ್ಕಳು ಮನೆಯಿಂದ ಹೊರ ಬರುವುದೇ ಕಷ್ಟಸಾಧ್ಯವಾಗಿದೆ ಎಂದರು.
ಮಕ್ಕಳನ್ನು ಉತ್ತಮ ಪ್ರಜೆಯಾಗಿ ರೂಪಿಸಬೇಕು. ಮಕ್ಕಳ ಬಗ್ಗೆ ಪೋಷಕರು ಭ್ರಮೆಯಿಂದ ಹೊರಬರಬೇಕು. ಮಕ್ಕಳ ಜೊತೆ ಪೋಷಕರು ಬೆರೆಯಬೇಕು ಎಂದು ಲತೀಫ್ ಅವರು ಸಲಹೆ ಮಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ಮಾತನಾಡಿ ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮ, ಮಕ್ಕಳ ಸಮಸ್ಯೆಗಳು, ಮಕ್ಕಳ ಬೇಡಿಕೆಗಳು, ಮತ್ತಿತರ ಬಗ್ಗೆ ಮಾಹಿತಿ ನೀಡಿದರು. ಬಳಿಕ ಮಕ್ಕಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.
ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವುದು, ಶಿಕ್ಷಣಕ್ಕೆ ಆದ್ಯತೆ ನೀಡುವುದು, ಮತ್ತಿತರ ಸಮಸ್ಯೆಗಳ ಬಗ್ಗೆ ಮಕ್ಕಳು ತಮ್ಮ ಅನಿಸಿಕೆ ಅಭಿಪ್ರಾಯ ಹಂಚಿಕೊಂಡರು.
ಒಡಿಪಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಜಾಯ್ಸ್ ಮೆನೇಜಸ್, ಶಿಕ್ಷಕರಾದ ಟಿ.ಜಿ.ಪ್ರೇಮ್‍ಕುಮಾರ್ ಇತರರು ಮಕ್ಕಳ ಪಾಲನೆ ಮತ್ತು ಪೋಷಣೆ ಬಗ್ಗೆ ಹಲವು ಸಲಹೆ ನೀಡಿದರು.

LEAVE A REPLY

Please enter your comment!
Please enter your name here