ಮಕ್ಕಳ ಹಕ್ಕುಗಳ ಮಾಸಾಚರಣೆ, ಮಕ್ಕಳ ಬಗ್ಗೆ ಪಾಲಕರಿಗೆ ಎಚ್ಚರವಿರಲಿ- ಪ್ರವೀಣ್ ನಾಯಕ್,

0
122

ದಾವಣಗೆರೆ ನ.15-ಕೋವಿಡ್ ಸಂದರ್ಭದಲ್ಲಿ ವಿವಿಧ ಕಾರಣಗಳಿಂದ ಮಕ್ಕಳು ಭಿಕ್ಷಾಟನೆಗೆ ಇಳಿದಿದ್ದು, ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಣೆ, ದುರ್ಬಳಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಈ ಕುರಿತು ಪಾಲಕರು, ಮಕ್ಕಳು ಹಾಗೂ ನೆರೆಹೊರೆಯವರಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ, ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಂತೆ ಜಿಲ್ಲಾಡಳಿತದೊಂದಿಗೆ ಎಲ್ಲಾ ಇಲಾಖೆಗಳು ಪರಿಶ್ರಮ ವಹಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಯೂನಿಸೆಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣಾ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಯಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನವೆಂಬರ್ ಮಾಹೆಯನ್ನು ಮಕ್ಕಳ ಹಕ್ಕುಗಳ ಮಾಸಾಚರಣೆಯ ಅಂಗವಾಗಿ ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪಾರಿಣಾಮಗಳ ಕುರಿತು ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಅತ್ಯವಶ್ಯಕ ಸೌಕರ್ಯಗಳನ್ನು ಒದಗಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳನ್ನು ರೂಪಿಸಿ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕಾದ ಜವಾಬ್ದಾರಿ ಸಂಬಂಧಪಟ್ಟ ಇಲಾಖೆಗಳಿಗಿದೆ. ಸಾರ್ವಜನಿಕರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯ, ಹಿಂಸೆ, ಮಾನಸಿಕ ಹಿಂಸೆ ಇಂತಹ ಪ್ರಕರಣಗಳಿಗೆ ಹಾಗೂ ಮಕ್ಕಳ ಹಿತಾಸ್ತಿಗೆ ಕಾನೂನಿನಲ್ಲಿ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ದೂರನ್ನು ದಾಖಲಿಸಲು ಅವಕಾಶವಿರುತ್ತದೆ. ಇಂತಹ ದೂರುಗಳ ವಿಚಾರಣೆಗಾಗಿ ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯವಿದ್ದು, ಆರೋಪಿಗಳನ್ನು ಮಕ್ಕಳ ಎದುರು ತರದೇ ವಿಚಾರಣೆ ನಡೆಸಿ ನ್ಯಾಯ ಒದಗಿಸಲಾಗುವುದು. ಈ ಕುರಿತು ಮಕ್ಕಳು, ಪೋಷಕರು, ಶಿಕ್ಷಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ.ಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ ಮಾಹೆಯನ್ನು ಮಕ್ಕಳ ಹಕ್ಕುಗಳ ಮಾಸಾಚರಣೆಯಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ಮತ್ತು ಕೋವಿಡ್ ಸೋಂಕು ಸಾಂಕ್ರಾಮಿಕದಿಂದ ಪೋಷಕರು, ಅವಲಂಬಿತರನ್ನು ಕಳೆದುಕೊಂಡ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಾದ ಬಾಲ್ಯ ವಿವಾಹ, ಪೌಷ್ಠಿಕ ಆಹಾರದ ಕೊರತೆ, ಶಿಕ್ಷಣದ ಸೌಲಭ್ಯಗಳು ಹೀಗೆ ಅನೇಕ ಸಮಸ್ಯೆಗಳ ಕುರಿತು ಮಕ್ಕಳ ಧ್ವನಿಯನ್ನು ಆಲಿಸಲು ಸಾರ್ವಜನಿಕ ವಿಚಾರಣೆ ನಡೆಸಲು ಆಯೋಗ ಶಿಫಾರಸ್ಸು ಮಾಡಿದೆ ಎಂದು ತಿಳಿಸಿದರು.
ಕೋವಿಡ್ ಕಾರಣದಿಂದ ಪೋಷಕರನ್ನು ಅವಲಂಬಿತರನ್ನು ಕಳೆದುಕೊಂಡ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಕ್ಕಳ ಧ್ವನಿಯನ್ನು ಆಲಿಸಲು ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಸಭೆಯನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಪ್ರತಿ ಜಿಲ್ಲೆಗೂ 30 ವಿದ್ಯಾರ್ಥಿಗಳನ್ನು ಕರೆಸಿ ಸಭೆ ನಡೆಸಿ ಸಮಸ್ಯೆ ಆಲಿಸಲಾಗುವುದು. ಈ ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳನ್ನು ನ.22 ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಮಕ್ಕಳ ಸಾರ್ವಜನಿಕ ಅಹವಾಲು ಸಭೆಗೆ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯ ರಾಘವೇಂದ್ರ.ಹೆಚ್ ಮಾತನಾಡಿ, ಪ್ರಪಂಚದ ಹಲವು ರಾಷ್ಟ್ರಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಹೆಚ್ಚಾಗಿದೆ. ಕೋವಿಡ್ ಕಾರಣದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಒಂದೆಡೆಯಾದರೆ, ಅನೇಕ ಮಕ್ಕಳು ಮಾನಸಿಕ ಖಿನ್ನತೆಗೆ ತುತ್ತಾಗಿದ್ದಾರೆ. ಲಾಕ್‍ಡೌನ್ ವೇಳೆ ಶಿಕ್ಷಣದಿಂದ ವಂಚಿತರಾಗಿದ್ದು, ನಂತರ ಆನ್‍ಲೈನ್ ತರಬೇತಿ ಪ್ರಾರಂಭವಾದರು ಸಹ ಅನೇಕ ಮಕ್ಕಳು ಇದರಿಂದ ವಂಚಿತರಾಗಿದ್ದಾರೆ. ಮಕ್ಕಳಲ್ಲೂ ವಯಕ್ತಿಕ ಸಮಸ್ಯೆಗಳಿದ್ದು ಅವರ ಧ್ವನಿಗೆ ಪೋಷಕರು, ಶಿಕ್ಷಕರು ಧ್ವನಿಯಾಗಬೇಕು. ಈ ಕುರಿತು ಜಿಲ್ಲೆ, ರಾಜ್ಯ ಹಾಗೂ ವಿಭಾಗೀಯ ಮಟ್ಟದಲ್ಲಿ ಸಮಾಲೋಚನೆ ನಡೆಸಬೇಕು ಎಂದರು.
ಸ್ಪೂರ್ತಿ ಸಂಸ್ಥೆ ಸಿಇಓ ಕೆ.ಬಿ.ರೂಪನಾಯ್ಕ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಮಕ್ಕಳು ಅನುಭವಿಸಿದ ತೊಂದರೆ, ಸಮಸ್ಯೆಗಳು, ತಾವು ವಾಸಿಸುವ ಪರಿಸರದಲ್ಲಿನ ಅಡಚಣೆಗಳ ಬಗ್ಗೆ ಮಕ್ಕಳ ಗ್ರಾಮಸಭೆಯಲ್ಲಿ ಹೇಳಿಕೊಳ್ಳಲು ಅವಕಾಶವಿರುತ್ತದೆ. ಈ ಸಮಸ್ಯೆಗಳನ್ನು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಪರಿಹರಿಸಬೇಕು. ಕೋವಿಡ್ ಕಾರಣದಿಂದ ವಿಶೇಷ ಮಕ್ಕಳು ತೊಂದರೆ ಅನುಭವಿಸುತ್ತಿದ್ದು ಪರಿಹಾರ ಒದಗಿಸಬೇಕು. ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕು. ಮಕ್ಕಳ ಭಿಕ್ಷಾಟನೆ ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಕ್ರಮ ತೆಗೆದುಕೊಳ್ಳಬೇಕು ಎಂದರು.
ಈ ವೇಳೆ ‘ಮಕ್ಕಳಿಗೂ ಇವೆ ಹಕ್ಕುಗಳು’ ಕೈಪಿಡಿ ಪುಸ್ತಕ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ನಂತರ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರೇಷ್ಮಾ ಕೌಸರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾನಾಯ್ಕ ವೈ, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here