ಧಾರವಾಡ :ಡಿ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಇಸಿ ವಿಭಾಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ, ಬೀದಿನಾಟಕ ಕಲಾತಂಡಗಳಿಂದ ಕೋವಿಡ್ ಲಸಿಕಾಕರಣ ಅಭಿಯಾನದ ಕುರಿತು ಕಾರ್ಯಕ್ರಮ ರೂಪಿಸಲಾಗಿದೆ.
ಇಂದು (ಡಿ.23) ಬೆಳಿಗ್ಗೆ, ಸೆಂಟ್ರಲ್ ಫಾರ್ ಯುಥ್ ಕಲ್ಚರಲ್ ಡೆವಲಪಮೆಂಟ್ ಕಲಾತಂಡಗಳಿಂದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಕೋವಿಡ್-19 ಲಸಿಕಾ ಅಭಿಯಾನದ ಕುರಿತು ಜಾಗೃತಿ ಮೂಡಿಸುವ ನೃತ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಯಶವಂತ ಮದೀನಕರ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ ಕಲಾತಂಡಗಳ ಮೂಲಕ ಗ್ರಾಮದ ಜನರಿಗೆ ಆರೋಗ್ಯ ಇಲಾಖೆಯ ಕಾರ್ಯಕ್ರಮ, ಯೋಜನೆಗಳಾದ ತಾಯಿ ಮಗುವಿನ ಮರಣ ಪ್ರಮಾಣ ಕಡಿಮೆಗೊಳಿಸುವುದು, ಸಾಂಕ್ರಾಮಿಕ ರೋಗಗಳ ಬಗ್ಗೆ, ಕೋವಿಡ್-19 ಲಸಿಕೆ ಬಗ್ಗೆ, ಕುಟುಂಬ ಕಲ್ಯಾಣ ಯೋಜನೆಗಳ ಬಗ್ಗೆ, ಆರೋಗ್ಯ ಸಂಜೀವಿನಿ, ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕದ ಬಗ್ಗೆ ಈ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ಗ್ರಾಮದ ಜನರಿಗೆ ಮನಮುಟ್ಟುವ ಹಾಗೆ ಕಲಾ ತಂಡದವರು ತಮ್ಮ ವಿವಿಧ ಕಲೆಪ್ರಕಾರಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಬಿ. ನಿಂಬಣ್ಣವರ, ಜಿಲ್ಲಾ ಕುಷ್ಠರೋಗ ನಿಮೂಲನಾ ಅಧಿಕಾರಿಗಳಾದ ಡಾ. ಶಶಿ ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ಸುಜಾತಾ ಹಸವಿಮಠ, ಧಾರವಾಡ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ತನುಜಾ ಕೆ.ಎನ್, ಧಾರವಾಡ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ಬಾಡಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಸ್ವಾಗತಿಸಿದರು, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಕೆ. ಚವ್ಹಾಣ ವಂದಿಸಿದರು.