ಮಾ.12 ರಂದು ರಾಷ್ಟ್ರೀಯ ಲೋಕ್‍ ಅದಾಲತ್, ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡ ರಾಜಿ ಮೂಲಕ ಇತ್ಯರ್ಥ- ನ್ಯಾ. ರಾಜೇಶ್ವರಿ ಹೆಗಡೆ.

0
119

ದಾವಣಗೆರೆ, ಮಾ.02 :ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಮಾ.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಅವರು ಹೇಳಿದರು.

ಬುಧವಾರ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿಯಾಗಬಹುದಾದ ವಿವಿಧ ಪ್ರಕರಣಗಳ ಜೊತೆಗೆ, ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಕೂಡ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮಾ.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಜಿಲ್ಲೆಯಲ್ಲಿ ಆಯೋಜಿಸಿದ್ದು, ಸುಮಾರು 7948 ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಲೋಕ್ ಅದಾಲತ್‍ಗೆ ಇನ್ನೂ ಸಾಕಷ್ಟು ಕಾಲಾವಕಾಶ ಇರುವುದರಿಂದ ನ್ಯಾಯಲಯದಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಕೂಡ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯಥಪಡಿಸಲು ಅವಕಾಶ ಒದಗಿಸಲಾಗಿದೆ. ಇದರಿಂದಾಗಿ ಕಡಿಮೆ ಸಮಯದಲ್ಲಿ ವೆಚ್ಚ ರಹಿತವಾಗಿ ವ್ಯಾಜ್ಯಗಳು ಇತ್ಯರ್ಥಗೊಳ್ಳಲಿದ್ದು, ಸಮಾಜದಲ್ಲಿ ಉತ್ತಮ ಬಾಂಧವ್ಯ ಮೂಡಲು ಲೋಕ್ ಅದಾಲತ್ ಸಹಕಾರಿಯಾಗಿದೆ ಎಂದರು.

ಕಳೆದ ಡಿಸೆಂಬರ್ 18 ರಂದು ನಡೆಸಲಾದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯಲ್ಲಿ ಒಟ್ಟು 5318 ಪ್ರಕರಣಗಳು ಇತ್ಯರ್ಥಗೊಂಡು, 7,07,43,859 ಕೋಟಿ ರೂ. ಗಳ ಪರಿಹಾರ ಒದಗಿಸಲಾಗಿದೆ. ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಜೀವ ವಿಮಾ ನಿಗಮ ಅಧಿಕಾರಿಗಳು, ವಕೀಲರು, ಎಂ.ವಿ.ಸಿ ಪ್ರಕರಣದ ಅರ್ಜಿದಾರ ವಕೀಲರುಗಳು, ಭೂ ವಿಜ್ಞಾನ ಇಲಾಖೆ, ಬ್ಯಾಂಕ್ ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಲೋಕ್ ಅದಾಲತ್ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಮಾ.12 ರಂದು ಮತ್ತೊಮ್ಮೆ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರಾಧಿಕಾರವು ಉದ್ದೇಶಿಸಿದೆ. ಹೀಗಾಗಿ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾ.12 ರಂದು ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ 36,824 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ ಸುಮಾರು 4 ಸಾವಿರ ಪ್ರಕರಣಗಳು ಲೋಕ್ ಅದಾಲತ್ ವ್ಯಾಪ್ತಿಗೆ ಬರುವುದಿಲ್ಲ. 14,472 ಪ್ರಕರಣಗಳು ರಾಜಿ ಮಾಡಿಕೊಳ್ಳಬಹುದಾಗಿದೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಲೋಕ್ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು.

ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಮರುಪಾವತಿ ಮಾಡಲಾಗುವುದು. ಕಕ್ಷಿಗಾರರು ಭೌತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮುಖಾಂತರ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ನ್ಯಾ. ರಾಜೇಶ್ವರಿ ಹೆಗಡೆ ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಮಾತನಾಡಿ, ಮಾ.12 ರಂದು ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರೀಯ ಲೋಕ್ ಅದಾಲತ್ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿ, ರಾಜಿಯಾಗಬಹುದಾದ ಪ್ರಕರಣಗಳನ್ನು ಗುರುತಿಸಿ, ಇತ್ಯರ್ಥಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಲೋಕ್‍ಅದಾಲತ್ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮೆಗಾ ಲೋಕ್ ಅದಾಲತ್‍ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ ಇವರನ್ನು ದೂ.ಸ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ಇವರನ್ನು ಸಂಪರ್ಕಿಸಬಹುದಾಗಿದೆ.

ಕಾನೂನು ಸೇವಾ ಪ್ರಾಧಿಕಾರ ಮತ್ತು ಅಭಿಯೋಜನಾ ಇಲಾಖೆಯ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ವಿ.ಪಾಟೀಲ್ ಮಾತನಾಡಿ ಲೋಕ ಅದಾಲತ್ ಮೂಲಕ ರಾಜಿಯಾಗಬಹುದಾದ ಅರ್ಹ ಪ್ರಕರಣಗಳನ್ನು ರಾಜಿ ಮಾಡಲು ಸಲಹೆ ಸೂಚನೆ ನೀಡಿ ಪ್ರಯತ್ನ ಮಾಡಲಾಗುವುದು ಎಂದರು.

ಇದೆ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಬಿ.ಬಿ ರಾಮಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here