ಮಡಿಕೇರಿ ಮಾ.22 :-ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ ಎಫ್ಎಸ್ಎಸ್ಎಐ ನಡಿ ನೋಂದಣಿ/ ಪರವಾನಗಿ ಪಡೆಯುವ ಬಗ್ಗೆ ಚೇಂಬರ್ ಆಫ್ ಕಾಮರ್ಸ್ ಜೊತೆಗೆ ಕಾರ್ಯಗಾರ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತಾಧಿಕಾರಿ ಡಾ.ಅನಿಲ್ ಧವನ್ ಅವರು ಮಾತನಾಡಿ ರೂ. 12 ಲಕ್ಷ ಒಳಗೆ ವ್ಯಾಪಾರ ವಹಿವಾಟುವ ಮಾಡುವವರು ನೋಂದಣಿ ಮಾಡಬೇಕಿದೆ. ರೂ. 12 ಲಕ್ಷಕ್ಕಿಂತ ಹೆಚ್ಚು ವ್ಯಾಪಾರ ಮಾಡುವವರು ಪರವಾನಗಿ ಪಡೆಯಬೇಕಿದೆ ಎಂದು ಅವರು ಹೇಳಿದರು.
ಪ್ಲಾಂಟರ್ಸ್ ಅಸೋಷಿಯೇಷನ್ನ ವಿಶ್ವನಾಥ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ಕಾಫಿ ಬಗ್ಗೆ ಸಹ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.
ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್ನ ಅಧ್ಯಕ್ಷರಾದ ಮೋಹನ್ ದಾಸ್ ಅವರು ಮಾತನಾಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್, ಕಾಫಿ ಮಂಡಳಿ ಉಪ ನಿರ್ದೇಶಕರಾದ ಶಿವಕುಮಾರ ಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕರು ಇದ್ದರು.