ಹೊಸಪೇಟೆ(ವಿಜಯನಗರ),ಏ.20 : ಸಕಾಲದಲ್ಲಿ ಶೇ.47ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಲ್ಲಿಕೆಯಾಗಿದ್ದು, ಬಹುತೇಕ ಎಲ್ಲಾ ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ಹೊಸಪೇಟೆಯ ತಹಶೀಲ್ದಾರ್ ವಿಶ್ವಜಿತ ಮೆಹತ ಅವರು ಹೇಳಿದರು.
ಸಕಾಲ ಸೇವೆಗಳಿಗೆ ದಶಮಾನೋತ್ಸವ ಸಂದ ಹಿನ್ನೆಲೆ ಹೊಸಪೇಟೆ ತಾಲೂಕು ಕಚೇರಿ ಆವರಣದಲ್ಲಿ ಬುಧವಾರದಂದು ಆಯೋಜಿಸಿದ್ದ ಸಕಾಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಸರಿಯಾದ ಸಮಯಕ್ಕೆ ಸೇವೆ ಸಲ್ಲಿಸುವ ಉದ್ದೇಶದಿಂದ ಈ ಸಕಾಲ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ವಿವಿಧ ಇಲಾಖೆಗಳಲ್ಲಿ ಸಕಾಲದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇ ಮಾಡುವುದರಲ್ಲಿ ವಿಳಂಬವಾಗುತ್ತಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಕಾಲ 10ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಲೇಜು ರಸ್ತೆಯಲ್ಲಿ ಅಂಬೇಡ್ಕರ್ ಸರ್ಕಲ್ನಿಂದ ತಾಲೂಕು ಕಚೇರಿ ಆವರಣದವರೆಗೆ ಸಕಾಲ ಜಾಥಾ ನಡೆಯಿತು.
ಸಕಾಲ ಜಾಥಾದಲ್ಲಿ ಸಕಾಲದಡಿ ಲಭ್ಯವಿರುವ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಅಮರನಾಥ, ಶಿರಸ್ತೇದಾರ್ ರಮೇಶ, ಶ್ರೀಧರ್, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.