ಧಾರವಾಡ:ಮೇ.24: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ 30, 31 ಮತ್ತು ಜೂನ್ 1 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಿದ್ದು, ಧಾರವಾಡ ಜಿಲ್ಲೆಯ 604 ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಕ್ರೀಡಾಕೂಟವನ್ನು ಮೇ.30 ರಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ಧಾರವಾಡ ಜಿಲ್ಲೆಯಿಂದ 604 ಸ್ಪರ್ಧಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆನ್ಲೈನ್ ಮೂಲಕ 348 ಸ್ಪರ್ಧಿಗಳು ನೋಂದಣಿ ಮಾಡಿಕೊಂಡಿದ್ದು, ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಂದು ಬೆಳಗ್ಗೆ 10 ಘಂಟೆಗೆ ಸ್ಪರ್ಧಾಳುಗಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗುವುದು. ಕ್ರೀಡಾಪಟುಗಳಿಗೆ ಟ್ರ್ಯಾಕ್ಸೂಟ್, ಕ್ಯಾಪ್ ವಿತರಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ಮಾತ್ರ ವಸತಿ ಸೌಲಭ್ಯ ಕಲ್ಪಿಸಲಾಗಿದ್ದು. ಎಲ್ಲಾ ಕ್ರೀಡಾಪಟುಗಳಿಗೆ ಮೂರು ದಿನವೂ ಊಟ ಮತ್ತು ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೇ30 ರಂದು ಸಂಜೆ 6 ಘಂಟೆಗೆ ಖಾತ್ಯ ಗಾಯಕ ವಿಜಯ ಪ್ರಕಾಶ ಅವರಿಂದ ಸಂಗೀತ ರಸಸಂಜೆ ಹಾಗೂ ಮೇ 31 ರಂದು ಸಂಜೆ 6 ಘಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಜಾನಪದ ಕಲಾತಂಡಗಳಿಂದ ಸಾಂಸ್ಕøತಿಕ ರಸಸಂಜೆ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ಮೇ.28 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ಇವರ ಕಛೇರಿಯಿಂದ ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕು. ಮೇ.30 ರಂದು ನೋಂದಣಿ ಸಮಯದಲ್ಲಿ ಗುರುತಿನ ಚೀಟಿ ತೋರಿಸಿ ರಾಜ್ಯ ಮಟ್ಟದ ಐ.ಡಿ. ಕಾರ್ಡನ್ನು ಪಡೆಯತಕ್ಕದ್ದು. ರಾಜ್ಯಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಈ ಬಾರಿ ವಿಶೇಷ ನೆನಪಿನಕಾಣಿಕೆಗಳನ್ನು ನೀಡಲಾಗುವುದು. ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ನೌಕರ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.