ಬಳ್ಳಾರಿ,ಡಿ.02: ಮುಂದಿನ ವರ್ಷದಲ್ಲಿ ಚುನಾವಣೆಗಳು ಆರಂಭವಾಗಲಿದ್ದು, ಇದುವರೆಗೆ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳದ ವಿದ್ಯಾರ್ಥಿಗಳು ಡಿ.9ರೊಳಗೆ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್ ಮಂಜುನಾಥ ಅವರು ಕರೆ ನೀಡಿದರು.
ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿ.9ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶವಿದ್ದು, 2023ನೇ ಜನವರಿ 1ಕ್ಕೆ 18ವರ್ಷ ತುಂಬುವ ಎಲ್ಲಾ ಯುವ ಮತದಾರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮತದಾನವು ಪ್ರತಿಯೊಬ್ಬರ ಹಕ್ಕು, ಉತ್ತಮ ಆಡಳಿತ ವರ್ಗವನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಹಕ್ಕಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಹೆಚ್.ವಿಶ್ವನಾಥ ಸೇರಿದಂತೆ ಮತದಾರ ನೊಂದಣಿಧಿಕಾರಿಗಳು, ನೊಡೆಲ್ ಅಧಿಕಾರಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಇದ್ದರು.