ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು.
ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಎಸ್,ಬಿ ಎಜುಕೇಷನ್ ಟ್ರಸ್ಟ್ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಅರ್.ಟಿ.ಇ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಮಕ್ಕಳ ಹಕ್ಕುಗಳ ಮೇಲೆ ಸಾಕಷ್ಟು ಪ್ರಹಾರ ಆಗುತ್ತಿದೆ. ಮಕ್ಕಳ ರಕ್ಷಣೆಗೆ ಸರ್ಕಾರ ಹಲವಾರು ಕಾಯ್ದೆಗಳನ್ನು ರೂಪಿಸಿದೆ. ಮಕ್ಕಳು ಕಾಯ್ದೆಗಳ ಬಗ್ಗೆ ತಿಳಿದುಕೊಂಡರೆ ಅವರ ಮೇಲಿನ ದೌರ್ಜನ್ಯ ಸ್ಪಲ್ಪ ಮಟ್ಟಿಗೆ ತಗ್ಗುತ್ತದೆ ಎಂದರು.
ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳು ದೊರೆತರೆ ಮಕ್ಕಳು ಉತ್ತಮ ಪ್ರಜೆಗಳಾಗಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಸುದ್ದಿಗಳಿವೆ. ಅದನ್ನು ನಾವು ಅಳಿಸಬೇಕು. ಎಲ್ಲರೂ ಸಂಘಟಿತರಾಗಿ ಬಾಲ್ಯ ವಿವಾಹಗಳನ್ನು ತಡೆಗಟ್ಟಿ ಮಕ್ಕಳಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸ ಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯದೀಶರಾದ ನಳಿನಿ ಕುಮಾರಿ ಅವರು ಮಾತನಾಡಿ ಮಂಡ್ಯದಲ್ಲಿ ಪೋಕ್ಸೋ ಕಾಯ್ದೆಗೆ ಸಂಬಂಧ ಪಟ್ಟಂತೆ ಎರಡು ನ್ಯಾಯಲಯಗಳಿವೆ. ಪೋಕ್ಸೋ ಕಾಯ್ದೆಯಡಿ ಸುಮಾರು 50 ಪ್ರಕರಣಗಳು ದಾಖಲಾಗಿವೆ. ಇನ್ನು ಐಪಿಸಿ 376ರ ಅಡಿ 245 ಪ್ರಕರಣಗಳಿವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಮಹಿಳಾ ಹಾಗೂ ಮಕ್ಕಳ ಇಲಾಖೆ ವತಿಯಿಂದ ಇನ್ನೂ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್.ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಕೆ ಕುಮಾರಸ್ವಾಮಿ, ಬಿ.ಇ.ಒ ಸೌಭಾಗ್ಯ, ಬಿ.ಟಿ ಚಂದ್ರಕಾಂತ ಸೇರಿದಂತೆ ಇನ್ನಿತರರು ಹಾಜರಿದ್ದರು.