ಸಮಾಜ ಬಲಿಷ್ಠಗೊಳ್ಳುವಲ್ಲಿ ಯುವಶಕ್ತಿಯ ಪಾತ್ರ ಪ್ರಮುಖವಾದುದು: ನ್ಯಾ.ಸತೀಶ್ ಜೆ.ಬಾಳಿ

0
57

ಬಳ್ಳಾರಿ,ಮಾ.9 : ಯುವಶಕ್ತಿಯು ಬಲಿಷ್ಠ ಶಕ್ತಿ ಇದ್ದಂತೆ, ಯುವ ಸಮಾಜವು ನಿರ್ದಿಷ್ಟ ಗುರಿಯನ್ನು ಹೊಂದಿ ಮುನ್ನೆಲೆಗೆ ಬಂದರೆ ಸಮಾಜವು ಬಲಿಷ್ಠಗೊಳ್ಳುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗುರುವಾರ ಆಯೋಜಿಸಲಾಗಿದ್ದ “ಮಾದಕ ವಸ್ತುಗಳ ಸೇವನೆಯಿಂದ ಯುವ ಜನತೆಯ ಮೇಲೆ ಉಂಟಾಗುವ ದುಷ್ಪರಿಣಾಮ” ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ವಾಸ್ತವ ಸಮಾಜದಲ್ಲಿ ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳು ಹಾಗೂ ಇತರೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಪಾಲಕರು ಮಕ್ಕಳ ಮೇಲೆ ನಿಗಾ ವಹಿಸಬೇಕು. ಕಾಲೇಜು ಸಮಯದಲ್ಲಿ ಯಾರ ಜೊತೆ ಬೆರೆಯುತ್ತಿದ್ದಾರೆ ಹಾಗೂ ಯಾವ ವ್ಯಸನಕ್ಕೆ ಒಳಗಾಗಿದ್ದಾರೆ ಎಂಬುದನ್ನು ತಿಳಿಯಬೇಕು. ಮಕ್ಕಳ ಚಲನ ವಲನಗಳನ್ನು ಗಮನಿಸಬೇಕು ಎಂದು ತಿಳಿಸಿದರು.
1985ರಲ್ಲಿ ಎನ್‍ಟಿಪಿಎಸ್ ಆಕ್ಟ್ ಜಾರಿ ಬಂದಿದ್ದು, ಕಾಲ ಕಾಲಕ್ಕೆ ತಿದ್ದುಪಡಿಯಾಗುತ್ತಿದೆ. ಯುವಕರು ಮಾದಕ ವಸ್ತುಗಳಿಗೆ ವ್ಯಸನಿಗಳಾದಾಗ ಇಲ್ಲಿ ಸಮಾಲೋಚನೆಗೆ ಅವರನ್ನು ಒಳಪಡಿಸಬೇಕು. ಇತ್ತೀಚಿನ ದಿನಗಳಲ್ಲಿ STOP TOBACCO ಎನ್ನುವ ಆಪ್ ಬಂದಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡುವುದು ಕಂಡುಬಂದಲ್ಲಿ ಫೆÇೀಟೋ ತೆಗೆದು ಕಳುಹಿಸಬಹುದಾಗಿದೆ. ಪೆÇಲೀಸ್ ಇಲಾಖೆಯು ತಕ್ಷಣವೇ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ಆಂಟಿ ಡ್ರಗ್ ಕ್ಲಬ್ ಆರಂಭಿಸಿ ಧೂಮಪಾನ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಹೆಚ್.ಎಲ್.ಜನಾರ್ಧನ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಯುವ ಸಮಾಜವು ದುಶ್ಚಟಗಳಿಗೆ ಬಲಿಯಾಗದೇ ತಮ್ಮ ಶಕ್ತಿಯನ್ನು ಒಳ್ಳೆಯ ಕಡೆಗೆ ವಿನಿಯೋಗ ಹೊಂದಿದರೆ ಕುಟುಂಬ ಮತ್ತು ಸಮಾಜವು ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಒಂದು ತಂಡವು ಶಾಲಾ ಕಾಲೇಜು ಸುತ್ತ ಮುತ್ತಲೂ 100 ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಮತ್ತು ಇತರೆ ವಸ್ತುಗಳು ಮಾರುವ ಅಂಗಡಿಗಳು ಇರದಂತೆ ನೋಡಿಕೊಳ್ಳಲು ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಾಗಾರದಲ್ಲಿ ವಿಮ್ಸ್‍ನ ಹಿರಿಯ ಮನೋವೈದ್ಯಶಾಸ್ತ್ರಜ್ಞ ಡಾ.ನಿಶಾಂತ್ ಅವರು ಮಾದಕ ವಸ್ತುಗಳ ಸೇವನೆಯಿಂದ ಯುವ ಜನತೆಯ ಮೇಲೆ ಉಂಟಾಗುವ ದುಷ್ಪರಿಣಾಮ ಎಂಬ ವಿಷಯದ ಕುರಿತು, ಬೆಂಗಳೂರು ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ್.ಬಿ.ಯು ಅವರು ಕೋಟ್ಪಾ ಸೆಕ್ಷನ್ 4, 5, 6ಎ, 6ಬಿ ಹಾಗೂ 7 ರ ವಿವರಣೆ, ಜಿಲ್ಲಾ ಆಸ್ಪತ್ರೆಯ ತಂಬಾಕು ವ್ಯಸನ ಮುಕ್ತ ಕೇಂದ್ರದ ಆಪ್ತ ಸಮಾಲೋಚಕ ಮಲ್ಲೇಶಪ್ಪ ಅವರು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಚಿಕಿತ್ಸೆ ಹಾಗೂ ಸೌಲಭ್ಯಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮೈತ್ರಿ ಅಸೋಶಿಯೇಶನ್‍ನ ವೆಂಕಟೇಶ್, ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಸೇರಿದಂತೆ ಶ್ರೀಮೇಧಾ ಕಾಲೇಜು ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here