ಬಳ್ಳಾರಿ,ಏ.30: ಮತದಾರರು ಚುನಾವಣೆ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.
![](https://haisandur.com/wp-content/uploads/2023/04/FB_IMG_1682861716999.jpg)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಕಂಪ್ಲಿ ತಾಲೂಕು ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ದೇವಲಾಪುರ ಹತ್ತಿರದ ಉಪ್ಪಾರಹಳ್ಳಿ ಕೆರೆಯ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡವಾರು ಮತದಾನ ಹೆಚ್ಚಳವಾಗಲು ಜಾಗೃತಿ ಹೊಂದಬೇಕು. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಕೂಲಿ ಕಾರ್ಮಿಕರು ಆರೋಗ್ಯ ಪೌಷ್ಠಿಕಾಂಶವುಳ್ಳ ಕಡೆ ಗಮನಹರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು ಹಾಗೂ ಚಿಗುರು ಕಲಾ ತಂಡದಿಂದ ಮತದಾನ ಜಾಗೃತಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ಪ್ರಮೋದ್, ತಾಪಂ ಇಒ ಕೆ.ಎಸ್.ಮಲ್ಲನಗೌಡ, ಪಿಡಿಒ ಶ್ರೀಶೈಲಗೌಡ, ಆರೋಗ್ಯ ಇಲಾಖೆಯ ವೈದ್ಯರಾದ ಡಾ.ಅರುಣ್, ಡಾ.ರೇವಣಸಿದ್ದಪ್ಪ, ಡಾ.ಸುಭಾಶ್ ಸೇರಿದಂತೆ ತಾಪಂ, ಗ್ರಾಪಂ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು ಹಾಗೂ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.