ಕೊಟ್ಟೂರು: ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದು ನಂತರ ಸುದ್ಧಿಗಾರರೊಂದಿಗೆ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿರುವ ನನಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಹ್ವಾನದ ಮೇರೆಗೆ ಕಾಂಗ್ರೆಸ್ ಪಕ್ಷದ ಸಹಸದಸ್ಯಳಾಗಿ ಸೇರ್ಪಡೆಗೊಂಡಿದ್ದೇನೆ ಎಂದರು.
ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದ ಅವರು ಆಡಳಿತ ಪಕ್ಷದ ಜೊತೆ ಕೈಜೋಡಿಸಿದರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ದೊರೆಯುತ್ತದೆ ಎಂಬ ಉದ್ದೇಶದಿಂದ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆಯ ಮೇರೆಗೆ ಸೇರ್ಪಡೆಯಾಗಿದ್ದೇನೆ ಎಂದರು.
ಕ್ಷೇತ್ರದ ಕಾಂಗ್ರೆಸ್ ಮುಖಂಡರ ಜೊತೆ ಉತ್ತಮ ಒಡನಾಟವಿದ್ದು ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದರು. ಕ್ಷೇತ್ರದ ಅಬಿವೃದ್ಧಿಗೆ ಪಕ್ಷಾತೀತವಾಗಿ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆಯುತ್ತೇನೆ ಎಂದರು.
ಸಹೋದರ ಎಂ.ಪಿ.ರವೀಂದ್ರ ಅವರ ಅವಧಿಯಲ್ಲಿ ಕಾರ್ಯಗತವಾಗದ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದರು. ಕ್ಷೇತ್ರದಲ್ಲಿ ಜನತೆ ತುಂಬಾ ಭರವಸೆಯೊಂದಿಗೆ ನನ್ನನ್ನು ಗೆಲ್ಲಿಸಿರುವುದರಿಂದ ಅವರ ನಿರೀಕ್ಷೆಗಳನ್ನು ಹುಸಿಯಾಗದಂತೆ ಈಡೇರಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿ ಅಡಿಕೆ ಮಂಜುನಾಥ್, ಎಸ್.ಅಶೋಕ್,ಬಿ.ಕೆ.ಪ್ರಕಾಶ್, ನೀಲಪ್ಪ, ಪಮಪಾಪತಿ, ಭೀಮೇಶ್, ಶಿವಕುಮಾರ್ ಗೌಡ, ಯಾದವ್,ದುರುಗಪ್ಪ ಮುತ್ತಿಗೆ, ಬಸವರಾಜ್, ರಾಮಪ್ಪ, ಕರಿಬಸಪ್ಪ, ನಿಂಗನಗೌಡ ಮುಂತಾದವರು ಇದ್ದರು.
ವರದಿ: ಶಿವರಾಜ್ ಕನ್ನಡಿಗ