ಕೊಟ್ಟೂರು: ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನಕ್ಕೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಗಿನ ಸಮಯದಲ್ಲಿ ಮೋದನೆಯ ಪೂಜೆಯ ನಂತರ ಆಗಮಿಸಿದ ಮಹಿಳೆಯರಿಗೆ ಮುಜರಾಯಿ ಇಲಾಖೆಯಿಂದ ಅರಿಶಿಣ ಕುಂಕುಮ ಬಳೆಗಳ ಪೂಜಾ ಸಾಮಗ್ರಿಯೊಂದಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿಯವರು ನಿರ್ವಹಿಸಿದರು.
ವರಮಹಾಲಕ್ಷ್ಮಿ ಹಬ್ಬದ ಮಹತ್ವ:
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ. ಹಾಗಾಗಿ ಈ ವರಮಹಾಲಕ್ಷ್ಮಿ ವ್ರತದ ದಿನ ತಾಯಿಗೆ ಶ್ವೇತವರ್ಣದ ಕೆಂಪು ಅಂಚಿನ ಸೀರೆಯನ್ನು ಉಡಿಸುತ್ತಾರೆ.
ಲಕ್ಷ್ಮಿ ಎಂದರೆ ಶುದ್ಧತೆಯ ಸಂಕೇತವಾಗಿರುವುದರಿಂದ ಹಬ್ಬದ ದಿನದಂದು ಮುಂಜಾನೆ ಎದ್ದು ಮನೆಯನ್ನು ಶುಚಿಗೊಳಿಸಿ, ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ ಅಭ್ಯಂಜನವನ್ನು ಮಾಡಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಮಡಿಯಲ್ಲಿ ನೈವೇದ್ಯವನ್ನು ತಯಾರಿಸಲಾಗುತ್ತದೆ.
ವರ ಮಹಾಲಕ್ಷ್ಮಿ ವ್ರತವು ಮುಖ್ಯವಾಗಿ ಮಹಿಳೆಯರಿಗೆ ಹಬ್ಬವಾಗಿದೆ ಮತ್ತು ಇದನ್ನು ಮಹಿಳೆಯರು ಮಾತ್ರ ಆಚರಿಸುತ್ತಾರೆ. ಬಡತನವನ್ನು ತೊಲಗಿಸಲು ಮತ್ತು ಅಖಂಡ ಸೌಭಾಗ್ಯವನ್ನು ಹೊಂದಲು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ವರಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ.
ವರಮಹಾಲಕ್ಷ್ಮಿ ಹಬ್ಬದ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.