ಧಾರವಾಡ; ಅ.10: ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಅ.10) ಬೆಳಿಗ್ಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರತಿವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಕಾರ್ಯಕ್ರಮ ರೂಪಿಸಿದೆ. ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜ ಸೇವೆಗೆ ಶ್ರಮಿಸಿದ ಸಾಧಕರನ್ನು ಗೌರವಿಸಲು ಉದ್ದೇಶಿಸಲಾಗಿದೆ ಎಂದರು.
ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಅ.28 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಜಯಂತಿ ದಿನದ ಕಾರ್ಯಕ್ರಮದ ರೂಪುರೇಷೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಿದ್ಧಪಡಿಸಲಿದ್ದು, ಸಮುದಾಯದ ಮುಂಖಡರು ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ.ಬ್ಯಾಕೋಡ್ ಅವರು ವೇದಿಕೆಯಲ್ಲಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಭಕಾಷ್ ಎಂ.ಎಸ್., ಅವರು ಸ್ವಾಗತಿಸಿ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಕುರಿತು ವಿಷಯ ಮಂಡಿಸಿ ಸಭೆ ನಿರ್ವಹಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಸಮುದಾಯಗಳ ಮುಖಂಡರಾದ ಸುರೇಶ ಬಾಬು, ಸಿದ್ದಪ್ಪ ತಳವಾರ, ಶಾಂತವ್ವ ಗುಜ್ಜಳ, ಡಾ.ಕಲ್ಮೇಶ ಹಾವೇರಿಪೇಟ, ಜಿ.ಎನ್.ಕೂಬಿಹಾಳ, ಸುಲೋಚನಾ ಸುರಕೊಡ ಅವರು ಸೇರಿದಂತೆ ಸಮುದಾಯದ ಇತರರು ಉಪಸ್ಥಿತರಿದ್ದರು.