ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ: ಸುರೇಶ್ ಬಾಬು

0
25

ಮಡಿಕೇರಿ ನ.10:-ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್‍ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಕಳೆದ ಲೋಕಾಯುಕ್ತ ಸಭೆ ಸಂದರ್ಭದಲ್ಲಿ ಸ್ವೀಕರಿಸಿದ ಅರ್ಜಿಗಳ ಪಾಲನಾ ವರದಿಯನ್ನು ಪರಿಶೀಲಿಸಿದರು.
ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಮಾತನಾಡಿ ಸಕಾರದ ಎಲ್ಲಾ ಕಚೇರಿಗಳಲ್ಲಿ ಹಾಜರಾತಿ ಸಂಬಂಧ ಬಯೋಮೆಟ್ರಿಕ್ ಅಳವಡಿಸುವಂತೆ ಸೂಚಿಸಿದರು.

ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೇ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು.
ಸಾರ್ವಜನಿಕರಿಂದ 8 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ 1 ಮತ್ತು 2 ನ್ನು ನೀಡಲಾಯಿತು. ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಲೋಕೇಶ್, ತಹಶೀಲ್ದಾರ್ ಪ್ರವೀಣ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

LEAVE A REPLY

Please enter your comment!
Please enter your name here