ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ನಡೆಯಲಿರುವ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ ಯಾವುದೇ ಲೋಪವಿಲ್ಲದಂದೆ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಕೆ.ಪಿ.ಎಸ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ಕೆ.ಪಿ.ಎಸ್.ಸಿ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದರು.
ಡಿಸೆಂಬರ್ 16 ರಂದು ಮಧ್ಯಾಹ್ನ 2 ರಿಂದ 4 ರವರೆಗೆ ಮಂಡ್ಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡ ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷಾ ನಡೆಯಲಿದೆ. ಡಿಸೆಂಬರ್ 17 ರಂದು ಬೆಳಿಗ್ಗೆ 10 ರಿಂದ 11:30 ಕ್ಕೆ ಮಂಡ್ಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡ ಕೇಂದ್ರದಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ರವರೆಗೆ ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಅರಕೇಶ್ವರ ನಗರ, ಕುವೆಂಪು ಮಾದರಿ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ಪತ್ರಿಕೆ ಪರೀಕ್ಷೆ ನಡೆಯಲಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 2 ಸೆಂಟರ್ ಗಳಲ್ಲಿ ಪರೀಕ್ಷೆ ನಡೆಯಲಿದ್ದು ಅದರಲ್ಲಿ ಡಿಸೆಂಬರ್ 16 ರಂದು 1 ಸೆಂಟರ್ ನಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 17 ರಂದು 2 ಸೆಂಟರ್ ಗಳಲ್ಲಿಯು ಪರೀಕ್ಷೆ ನಡೆಯಲಿದೆ ಎಂದರು.
ಡಿಸೆಂಬರ್ 16 ರಂದು ಮಧ್ಯಾಹ್ನ 2 ಕ್ಕೆ ನಡೆಯಲಿರುವ ಪರೀಕ್ಷೆಗೆ 16 ಅಭ್ಯರ್ಥಿಗಳು, ಡಿಸೆಂಬರ್ 17 ರಂದು ಬೆಳಿಗ್ಗೆ 10.ಕ್ಕೆ ನಡೆಯಲಿರುವ ಪರೀಕ್ಷೆಗೆ ಎರಡೂ ಕೇಂದ್ರಗಳಲ್ಲೂ 577 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಪರೀಕ್ಷೆಗೆ ಎರಡೂ ಕೇಂದ್ರಗಳಲ್ಲೂ 344 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೆಲಸಕ್ಕೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೊಬೈಲ್ ಉಪಯೋಗಿಸದಂತೆ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರನ್ನು ಪರೀಕ್ಷೆಗೆ ಮುಖ್ಯ ಅಧಿಕ್ಷಕರುಗಳನ್ನಾಗಿ ನೇಮಿಸಲಾಗಿದೆ ಎಂದರು.
ಪರೀಕ್ಷಾ ಮಾರ್ಗಸೂಚಿಯಂತೆ ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ಥಳೀಯ ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪರೀಕ್ಷಾ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನೇಮಿಸಲಾಗಿದೆ ಎಂದರು.
ಪರೀಕ್ಷೆಯು ಸುಗಮವಾಗಿ ನಡೆಯಲು ಜಿಲ್ಲಾ ವ್ಯಾಪ್ತಿಯ 2 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ.