ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

0
26

ಬಳ್ಳಾರಿ,ಡಿ.19: ಇದೇ ಡಿ.27ರಿಂದ ಜ.11 ರ ವರೆಗೆ ಜಿಲ್ಲೆಯಲ್ಲಿ ನಡೆಯುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಎನ್‍ಜಿಓ ಹಾಗೂ ಅಂತರ್ ಇಲಾಖೆಗಳ ಸಮನ್ವಯತೆಯಿಂದ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಕುಷ್ಠರೋಗ ಸಾಂಕ್ರಾಮಿಕ ರೋಗವಾಗಿದ್ದು, ಇದು ಮೈಕೋಬ್ಯಾಕ್ಟೀರಿಯಂ ಲೆಪ್ರೈ ಎಂಬ ರೋಗಾಣುವಿನಿಂದ ಬರುತ್ತದೆ. ಇದು ಚಿಕಿತ್ಸೆ ಪಡೆಯದೇ ಇರುವ ಕುಷ್ಠರೋಗಿಯು ಕೆಮ್ಮಿದಾಗ, ಸೀನಿದಾಗ ಬರುವ ತುಂತುರು ಹನಿಗಳು ಉಸಿರಾಡುವ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವಂತಹ ರೋಗವಾಗಿದ್ದು, ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಅಂಗವಿಕಲತೆಯಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.

ಹೊಸದಾಗಿ ಕಂಡುಬರುವ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು ಶೇಕಡವಾರು 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಒಂದಕ್ಕಿಂತ ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆ ಹಚ್ಚಲು ಡಿ.27ರಿಂದ ಜ.11ರವರೆಗೆ ನಡೆಯುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಎನ್‍ಜಿಓ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿ/ಸಿಬ್ಬಂದಿಗಳಿಗೆ ಕರೆ ನೀಡಿದರು.

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂಸೇವಕರು ಮನೆ-ಮನೆಗೆ ಭೇಟಿ ನೀಡಿ ಮನೆಯಲ್ಲಿರುವ 2 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಕುಷ್ಠರೋಗದ ಬಗ್ಗೆ ಮಾಹಿತಿ ನೀಡಬೇಕು, ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರನ್ನು ಸಾರ್ವಜನಿಕ ಆರೋಗ್ಯ ಕೇಂದ್ರಗಳ ತಜ್ಞ ವೈದ್ಯಾಧಿಕಾರಿಗಳ ಹತ್ತಿರ ರೆಫರಲ್ ಫಾರಂ ನೀಡಿ ತಪಾಸಣೆ ಮಾಡಿಸಿಕೊಳ್ಳಲು ಸಲಹೆ ಮಾಡಬೇಕು. ವೈದ್ಯಾಧಿಕಾರಿಗಳು ತಪಾಸಣೆ ಮಾಡಿ ಕುಷ್ಠರೋಗ ಎಂದು ದೃಢಪಡಿಸಿದ ಮೇಲೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ಮಾತನಾಡಿ, ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಒಟ್ಟು 2,75,452 ಮನೆಗಳು ತಪಾಸಣಾ ಸಮೀಕ್ಷೆ ಮಾಡಲಾಗುವುದು, ಈ ತಪಾಸಣಾ ಸಮೀಕ್ಷೆ ಮಾಡಲು 1211 ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ ಆಶಾ ಕಾರ್ಯಕರ್ತೆಯರು ಅಥವಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂಸೇವಕರು ಇರುತ್ತಾರೆ. ಈ ತಂಡಗಳ ಮೇಲೆ 241 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 86 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರು ದುಡಿಯುವ ಪ್ರದೇಶಗಳಾದ ಇಟ್ಟಿಗೆ ಬಟ್ಟಿ, ಬಿಂಚೆ ಮಶಿನ್, ಸಿಮೆಂಟ್ ಬ್ರಿಕ್ಸ್, ರೈಸ್ ಮಿಲ್ ಇಂಡಸ್ಟ್ರಿಗಳು ಸೇರಿದಂತೆ ಇತರೆ 101 ಸ್ಥಳಗಳನ್ನು ಗುರುತಿಸಲಾಗಿದ್ದು, ಆರೋಗ್ಯ ಇಲಾಖೆಯ 10 ತಂಡಗಳು ಭೇಟಿ ನೀಡಿ ತಪಾಸಣಾ ಸಮೀಕ್ಷೆ ಮಾಡಲಿದ್ದಾರೆ. ಈ ತಂಡಗಳನ್ನು 5 ಮೇಲ್ವಿಚಾರಕರು ನಿಗಾವಹಿಸಿರುತ್ತಾರೆ ಎಂದರು.

ಮಹಾತ್ಮ ಗಾಂಧೀಜಿಯವರು ಕಂಡ ಕನಸು “ಕುಷ್ಠರೋಗ ಮುಕ್ತ ಭಾರತ” ಮಾಡಲು ಆರೋಗ್ಯ ಇಲಾಖೆ ತಂಡಗಳು ತಪಾಸಣೆಗಾಗಿ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ ಸೇರಿದಂತೆ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ಶುಶುಷ್ರಕರು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here