ಹೊಸಪೇಟೆ (ವಿಜಯನಗರ) ಫೆ.19: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಹಾಗೂ ಶ್ರೀ ಶಂಕರ ಆನಂದ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಉದ್ಘಾಟನೆಯು 88 ಮುದ್ಲಾಪುರ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.19ರಂದು ನಡೆಯಿತು.
ಸಖಿ ಸಂಸ್ಥೆಯ ನಿರ್ದೇಶಕಿ ಡಾ.ಎಂ.ಭಾಗ್ಯಲಕ್ಷ್ಮಿ ಅವರು ಶಿಬಿರ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಯುವಕರ ಸದೃಢ ವ್ಯಕ್ತಿತ್ವ ರೂಪಿಸುವಲ್ಲಿ ಸದಾ ಸಹಕಾರಿ ಮತ್ತು ಯುವಜನತೆಯ ಭಾಗವಹಿಸುವಿಕೆಯು ಸಮುದಾಯದಲ್ಲಿ ಬದಲಾವಣೆ ಮತ್ತು ಹೊಸತನಕ್ಕೆ ನಾಂದಿ ಹಾಡುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಕೆ.ಶಿವಪ್ಪ ಅವರು ಮಾತನಾಡಿ, ನಮ್ಮ ಕಾಲೇಜಿನಲ್ಲಿ ನಿರಂತರವಾಗಿ ಯುವಜನತೆಗೆ ಸಹಾಯಕವಾಗುವ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾಮೀಣ ಠಾಣೆಯ ಪಿಎಸ್ಐ ಸೂರ್ಯನಾರಾಯಣ್ ಮಾತನಾಡಿ, ತಮ್ಮ ಕಾಲೇಜು ದಿನಗಳಲ್ಲಿ ಎನ್ಎಸ್ಎಸ್ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ ದಿನಗಳನ್ನು ಮೆಲುಕು ಹಾಕಿದರು. ಯುವಕರು ಕಾನೂನಿನ ಜ್ಞಾನ ಪಡೆದು ಸಮಾಜದ ಏಳಿಗೆಯಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಿದರು.
ಎರಡನೇ ವಾರ್ಡಿನ ನಗರಸಭಾ ಸದಸ್ಯರಾದ ಜೀವರತ್ನಂ ಅವರು ಮಾತನಾಡಿದರು. ಶಿಬಿರದ ಅಧಿಕಾರಿ ಶ್ರೀ ರಘುಪ್ರಸಾದ್. ಟಿ ಅವರು ಪ್ರಾಸ್ತಾವಿಕ ಮಾತನಾಡಿ, ಒಂದು ವಾರಗಳ ಕಾಲ ನಡೆಯುವ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶಾಲಾ ಮುಖ್ಯಾಧ್ಯಾಪಕರಾದ ಪದ್ಮಲಕ್ಕಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎಸ್. ರಮೇಶ, ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ದೇವಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಜರಿದ್ದರು. ಕನ್ನಡ ವಿಭಾಗದ ಡಾ.ರೇಖಾ ನಿರ್ವಹಿಸಿದರು ಮತ್ತು ಮುರುಳೀದರ ಬಿ.ಕೆ. ವಂದಿಸಿದರು.