ಬಳ್ಳಾರಿ,ಮಾ.13: ‘ನನ್ನ ಒಂದು ಮತದಿಂದ ಏನು ಆಗುತ್ತದೆ ಎಂಬ ನಿರ್ಲಕ್ಷ್ಯ ಬೇಡ, ಪ್ರತಿಯೊಂದು ಮತವು ದೇಶದ ಭವಿಷ್ಯವನ್ನೇ ಬದಲಾಯಿಸುತ್ತದೆ’ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಮತ್ತು ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ಬಿಐಟಿಎಂ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ನೆರೆಹೊರೆ ಯುವ ಸಂಸತ್ತು-2024” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಮತದಾನ ಮಾಡುವವರ ಸಂಖ್ಯೆ ಕಡಿಮೆ ಇದ್ದು, ಮೂಲಭೂತ ಸೌಲಭ್ಯಗಳಾದ ನೀರು, ಚರಂಡಿ, ರಸ್ತೆ, ವಿದ್ಯುತ್, ಇತರ ಸಮಸ್ಯೆಗಳ ಬಗ್ಗೆ ಗಮನಹರಿಸಿ, ಸೂಕ್ತವಾಗಿ ಪರಿಹರಿಸಲು ಇಂದಿನ ಯುವಜನತೆ ತಪ್ಪದೇ ಮತದಾನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮತ ಚಲಾವಣೆ ನಮ್ಮ ಹಕ್ಕು ಮತ್ತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಅತ್ಯಮೂಲ್ಯವಾದ ಮತವನ್ನು ಚಲಾಯಿಸಬೇಕು ಎಂದು ಕಿವಿಮಾತು ಹೇಳಿದರು.
ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ವೈ.ಜೆ.ಪೃಥ್ವಿರಾಜ್ ಭೂಪಾಲ್ ಅವರು ಸಂವಿಧಾನದಂತೆ ಮತದಾನವು ಜನರಿಂದ, ಜನರಿಗಾಗಿ, ಜನರಿಗೋಸ್ಕರ ಒಂದೇ ಅಲ್ಲ.. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದ, ವಿದ್ಯಾರ್ಥಿಗಳಿಗಾಗಿ, ವಿದ್ಯಾರ್ಥಿಗಳಿಗೋಸ್ಕರ ಇರುವುದಾಗಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಪ್ಪದೇ ಮತವನ್ನು ಚಲಾಯಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪತಾರ್ ಅವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ್ ಅವರು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ ಬಗ್ಗೆ ಮಾಹಿತಿಯನ್ನು ನೀಡಿದರು.
ಬಿಐಟಿಎಂ ಕಾಲೇಜಿನ ಇಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳಾದ ಡಾ.ಕೆ.ರೂಪ, ನಾಗರಾಜ್, ಸುಶ್ಮ ಪ್ರೇಮಕಲಾಲ್, ಸಂಪತ್ ಕುಮಾರ್ ಇವರ ನಿರ್ದೇಶನದಲ್ಲಿ “ಅಣಕು ಸಂಸತ್ತು ಅಧಿವೇಶನವನ್ನು” ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಎನ್ಎಸ್ಎಸ್, ಎನ್ಸಿಸಿ ವಿದ್ಯಾರ್ಥಿಗಳೊಂದಿಗೆ ಸುಮಾರು 450 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ.ಯಡವಳ್ಳಿ ಬಸವರಾಜ್, ಎನ್.ಎಸ್.ಎಸ್ ಪೆÇ್ರಗ್ರಾಮ್ ಆಫೀಸರ್ ಅಶೋಕ್.ಬಿ, ಡಾ.ಶೇಕ್ಮೀರಾ, ಕಮಲ್ ಕಿಶೋರ್, ಲಕ್ಷ್ಮೀರೆಡ್ಡಿ, ಅಮರೇಶ, ಬೆಂಜಮಿನ್, ಬಿಸಲಹಳ್ಳಿ ಬಸವರಾಜ್, ಡಾ.ವೀಣಾ ಸೇರಿದಂತೆ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.