ಸಂಡೂರು ತಾಲ್ಲೂಕಿನ ತೋರಣಗಲ್ಲು ಪಟ್ಟಣದ 1ನೇ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ (ಇಒ) ಮಡಗಿನ ಬಸಪ್ಪ ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಇಒ ಮಡಗಿನ ಬಸಪ್ಪ ಅವರು, ಪಲ್ಸ್ ಪೋಲಿಯೋ ಅಭಿಯಾನವು ಮಕ್ಕಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಮಕ್ಕಳಿಗೂ ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಈ ಮಾರಕ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.
ಪೋಷಕರು ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೇ, ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು. ಒಬ್ಬ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂಬುದೇ ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಹೇಳಿದ ಅವರು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಮನ್ವಯದಿಂದ ಈ ಅಭಿಯಾನ ಯಶಸ್ವಿಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಓ ನಾಗರಾಜ್ ಅವರು ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಕ್ಕಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡ ಮಹತ್ವದ ಹೆಜ್ಜೆಯಾಗಿದೆ ಎಂದರು. ಗ್ರಾಮ ಮಟ್ಟದಲ್ಲಿ ಮನೆಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಶೇ.100ರಷ್ಟು ಗುರಿ ಸಾಧಿಸಲು ಎಲ್ಲಾ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಹೇಳಿದರು.
ವೈದ್ಯರಾದ ಡಾ. ಗೋಪಾಲ್ ರಾವ್ ಅವರು ಪೋಲಿಯೋ ರೋಗದ ಅಪಾಯ, ಲಕ್ಷಣಗಳು ಹಾಗೂ ಲಸಿಕೆಯ ಮಹತ್ವವನ್ನು ವಿವರಿಸಿದರು. ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ತಿಳಿಸಿ, ಸಾರ್ವಜನಿಕರಲ್ಲಿ ಇರುವ ಆತಂಕ ನಿವಾರಣೆ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ನಾಗರತ್ನ, ವೈ ಕುಮಾರ್, ಮಾಬುಸಾಬ್ ಹಾಗೂ ಅಂಗನವಾಡಿ ಸಿಬ್ಬಂದಿಗಳಾದ ಸ್ವಾತಿ, ಸುಮ,ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯ ಯಾಕೂಬ್ ಉಪಸ್ಥಿತರಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಅಂತಿಮವಾಗಿ, ಸಂಡೂರು ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಯಾಗಿ ಜಾರಿಗೆ ತರಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಿಳಿಸಲಾಯಿತು.
