(ವರದಿ: ಬಸಯ್ಯ ಜಿಎಂ)
ಮಕ್ಕಳಲ್ಲಿ ಓದುವ ಹವ್ಯಾಸ ಹಾಗೂ ಕ್ರಿಯಾಶೀಲತೆಯನ್ನು ಉತ್ತೇಜಿಸಿ ಉತ್ತಮ ವ್ಯಕ್ತಿತ್ವ ರೂಪಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲು ಸರ್ಕಾರ ಮುಂದಾಗಿದೆ ಎಂದು ಎಚ್. ವೀರಾಪುರ ಗ್ರಂಥಾಲಯ ಪಾಲಕ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಪೋಷಕರು ಸಹ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ತಾಲೂಕಿನ ಎಚ್. ವೀರಾಪುರ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಬಳ್ಳಾರಿ, ತಾಲೂಕು ಪಂಚಾಯತ್ ಕುರುಗೋಡು ಹಾಗೂ ಎಚ್. ವೀರಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಬೇಸಿಗೆ ರಜೆಗಳನ್ನು ಸದುಪಯೋಗಪಡಿಸಿಕೊಂಡು ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ಪಿಡಿಓ ದೇವರಾಜ್, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದು ಹಾಗೂ ವೃತ್ತಪತ್ರಿಕೆ ಓದುವ ಸಂಸ್ಕೃತಿ ರೂಢಿಸುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದರಿಂದ ಜ್ಞಾನ ವಿಸ್ತರಣೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಸವರಾಜ್, ಸ್ವಯಂಸೇವಕಿ ರಂಜಾನ್ ಬೀ, ತಾಲೂಕು ಸಂಯೋಜಕ ಮಲ್ಲಿಕಾರ್ಜುನ, ಮಹಿಳಾ ಒಕ್ಕೂಟದ ಪ್ರತಿನಿಧಿಗಳಾದ ರತ್ನಮ್ಮ, ತಾರಾ, ಮುತ್ತುರಾಜ್ ಸೇರಿದಂತೆ ಗ್ರಾಮದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
